ಹಾಸನದ ಅಶ್ಲೀಲ ವಿಡಿಯೋಗಳ (ಪೆನ್ಡ್ರೈವ್) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿ ತನಿಖೆಗೆ ಆದೇಶಿಸಿದೆ. ಈ ನಡುವೆ, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ, “ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು. ನಾನಾಗಲಿ, ಎಚ್.ಡಿ ದೇವೇಗೌಡರಾಗಲೀ ಇಂತಹ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ” ಎಂದಿದ್ದಾರೆ.
“ಹಾಸನ ಚುನಾವಣಾ ಪ್ರಚಾರ ವೇಳೆ ಪ್ರಕರಣ ಬಂದಿದೆ. ಈಗಾಗಲೆ, ಮುಖ್ಯಮಂತ್ರಿಗಳು ಎಸ್ಐಟಿ ತನಿಖೆಗೆ ಆದೇಶಿಸಿದ್ದಾರೆ. ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.
“ತನಿಖೆಯ ವರದಿ ಬಂದ ಮೇಲೆ ಮಾತನಾಡುತ್ತೇನೆ. ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಕರ್ಕೊಂಡು ಬರೋ ಜವಾಬ್ದಾರಿ ಸರ್ಕಾರದ್ದು. ಎಸ್ಐಟಿ ರಚಿಸಲಾಗಿದೆ, ಅವರೇ ಕರ್ಕೊಂಡು ಬರ್ತಾರೆ” ಎಂದು ಹೇಳಿದ್ದಾರೆ.