Friday, September 20, 2024

ಪ್ರಾಯೋಗಿಕ ಆವೃತ್ತಿ

ಮುಂಗಾರು ಚುರುಕು| ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ. ಹೀಗಾಗಿ, ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿನಲ್ಲೂ ಮಳೆ ಬೀಳಲಿದ್ದು ‘ಯೆಲ್ಲೋ ಅಲರ್ಟ್​’ ಘೋಷಿಸಲಾಗಿದೆ. ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ‘ಆರೆಂಜ್ ಅಲರ್ಟ್​’ ಘೋಷಿಸಲಾಗಿದೆ.

ಉಳಿದಂತೆ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲೆವೆಡೆ ಸಾಧಾರಣ ಮಳೆಯಾಗಿದೆ. ಆದರೆ, ಜೂನ್ 23ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಬಾರಿ ಬೇಗನೆ ಮುಂಗಾರು ಪ್ರವೇಶವಾಗಿದೆ. ಆದರೂ ಕೂಡ ಜೂನ್ ತಿಂಗಳಲ್ಲಿ ಮಳೆ ಕೊರತೆ ಕಾಡಲಿದೆ ಎಂದು ಇಲಾಖೆ ಸೂಚಿಸಿದೆ. ದೇಶದಲ್ಲಿ ಸರಾಸರಿ ಮಳೆ ಪ್ರಮಾಣದಲ್ಲಿ ಶೇಕಡಾ 20ರಷ್ಟು ಕೊರತೆಯಾಗಿದೆ. ಜೂ.1ರಿಂದ 18ರೊಳಗೆ 64.5 ಮಿ.ಮೀ ಮಳೆಯಾಗುವ ಮೂಲಕ ಶೇ.20ರಷ್ಟು ಕೊರತೆಯಾಗಿದೆ. ಉತ್ತರ ಭಾರತದ ಹಲವೆಡೆ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಆದರೆ, ದಕ್ಷಿಣ ಭಾರತದಲ್ಲಿ 106.6 ಮಿ.ಮೀ ಮಳೆಯಾಗುವ ಮೂಲಕ ಶೇ.16ರಷ್ಟು ಅಧಿಕ ಮಳೆಯಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!