ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸ್ವಾವಲಂಬನೆಗೆ ಸಹಕಾರಿಯಾಗುವ ಯೋಜನೆಯಾಗಿದೆ. ಈ ಯೋಜನೆಗೆ ರಾಜ್ಯದಲ್ಲಿ 1 ಕೋಟಿ 10 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ನೊಂದಣಿ ಮಾಡಿಸಿಕೊಂಡಿದ್ದು, ಆ.30 ರಂದು ಈ ಯೋಜನೆಯನ್ನು ಮೈಸೂರಿನಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಉದ್ಘಾಟಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆಯ ಜನಜಾಗೃತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಕಾರ್ಯಕ್ರಮ ಪ್ರತಿಯೊಂದು ಕುಟುಂಬಕ್ಕೆ ತಲುಪುವಂತೆ ಮಾಡಲು ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಿನದಾಗಿರುತ್ತದೆ . ಇದನ್ನು ಅರಿತು ಇಲಾಖೆಯ ಸಿಬ್ಬಂದಿ ವರ್ಗದವರು ಕ್ರಿಯಾಶೀಲವಾಗಿ ಕೆಲಸ ಮಾಡಬೇಕೆಂದರು.
ಬೆಲೆ ಏರಿಕೆ ಎಂದು ಬೊಬ್ಬೆ ಹೊಡೆಯುವವರಿಗೆ ನಮ್ಮ ಸರ್ಕಾರದ ಯೋಜನೆಯನ್ನು ಕಂಗೆಡಿಸಿದೆ. ಕೋರೋನಾ ನಂತರದ ಜೀವನ ದುಸ್ತರವಾಗಿದ್ದು, ಇದಕ್ಕೆ ಸರ್ಕಾರ ಶಕ್ತಿ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು ಮಹಿಳಾ ಅಭ್ಯುದಯಕ್ಕೆ ಶ್ರಮಿಸುತ್ತಿರುವುದಾಗಿ ಸಚಿವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಂಡ್ಯ ಜಿಲ್ಲೆಯಲ್ಲಿ ಒಟ್ಟು 4ಲಕ್ಷದ 74ಸಾವಿರದ ಅರ್ಹ ಫಲಾನುಭವಿ ಕಾರ್ಡುದಾರರು ಇದ್ದು, ಈ ಪೈಕಿ ಈ ವರೆಗೆ 4ಲಕ್ಷದ 2,800 ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿ ನೊಂದಣೀ ಮಾಡಿಸಿ ಕೊಂಡಿದ್ದಾರೆ. ಜಿಲ್ಲೆಯಲ್ಲಿ ಶೇ. 85% ಸಾಧನೆಯನ್ನು ಮಾಡಿದೆ. ಕೆ.ಆರ್.ಪೇಟೆ ತಾಲ್ಲೂಕು ಶೇ.87ರಷ್ಟು ನೊಂದಣಿ ಮಾಡಿಸಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿಮ ಕಾಂಗ್ರೆಸ್ ಸರ್ಕಾರವು ಪ್ರತಿ ಕುಟುಂಬಕ್ಕೆ ಪ್ರತಿ ಮಾಹೆಯಾನ ವಿವಿಧ ಯೋಜನೆಗಳಿಂದ ₹ 5000 ರೂ.ಗಳ ಅನುದಾನವನ್ನು ನೀಡುತ್ತಿದೆ. ಹಾಗಾಗಿ ಪ್ರತಿ ಕುಟುಂಬದ ಸದಸ್ಯರು ಆ-30 ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಿದರು.
ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷ ಬಿ.ಎಲ್.ದೇವರಾಜು ಮಾತನಾಡಿ, ಗೃಹಲಕ್ಷ್ಮೀ ಯೋಜನೆಗೆ
ತಾಲ್ಲೂಕಿನಲ್ಲಿ ಅತಿಹೆಚ್ಚು ನೊಂದಣಿಯನ್ನು ಮಾಡಿಕೊಂಡಿದ್ದಾರೆ. ನಮ್ಮ ತಾಲ್ಲೂಕಿನಲ್ಲಿ ಸ್ವಯಂ ಸೇವಕರ ಮೂಲಕ ಗೃಹಲಕ್ಷ್ಮೀ ನೊಂದಾಯಿಸಲು ಸಹಕಾರ ನೀಡಿದ್ದೇವೆ, ಇದರ ಪ್ರತಿಫಲವಾಗಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿ ನೊಂದಾವಣೆ ಆಗಿದೆ ಎಂದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಭಾರತ್ ಜೋಡೋ ಕಾರ್ಯಕ್ರಮ ಸಂಚಾಲಕ ವಿಜಯ್ ರಾಮೇಗೌಡ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಹರಳಹಳ್ಳಿ ವಿಶ್ವನಾಥ್, ಕೆ.ಎಸ್.ಬಸವೇಗೌಡ, ನಗರಸಭಾ ಮಾಜಿ ಉಪಾಧ್ಯಕ್ಷೆ ಇಂದಿರಾಸತೀಶ್ ಬಾಬು, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಕಿಕ್ಕೇರಿ ಸುರೇಶ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹೇಂದ್ರ, ಹ.ತಿ.ಶ್ರೀನಿವಾಸ್, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಬಿ.ಪ್ರತಿಮಾ, ಲೋಲಾಕ್ಷಿ, ಬಿ.ಸಿ.ಮೀನಾಕ್ಷಿ, ವಿನೂತ, ಯುವ ಕಾಂಗ್ರೆಸ್ ಮುಖಂಡರಾದ ಬೀರುವಳ್ಳಿ ಆಕಾಶ್, ಎ.ಬಿ.ಕುಮಾರ್, ಚೇತನಾ ಮಹೇಶ್ ಉಪಸ್ಥಿತರಿದ್ದರು.