ಸಂಶೋಧಕ ಎಂ.ಎಂ ಕಲ್ಬುರ್ಗಿ ಮತ್ತು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ‘ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದು ಗೊತ್ತಿದೆ ಬಿಡಿ’ ಎಂದು ಕಿಡಿಕಾರಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ 4ನೇ ಆರೋಪಿ ವಾಸುದೇವ್ ಭಗವಾನ್ ಸೂರ್ಯವಂಶಿ ಮತ್ತು 6ನೇ ಆರೋಪಿ ಅಮಿತ್ ಬಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. “ಕಳೆದ ಮಾರ್ಚ್ನಲ್ಲಿ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ಹೇಳಿತ್ತು. ಈಗ, ಜುಲೈ ಅಂತ್ಯ ಸಮೀಪಿಸುತ್ತಿದೆ. ಇದುವರೆಗೂ ವಿಶೇಷ ನ್ಯಾಯಾಲಯವೇಕೆ ಸ್ಥಾಪನೆಯಾಗಿಲ್ಲ” ಎಂದು ಸರ್ಕಾರದ ಪರ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ ಅಶೋಕ್ ನಾಯಕ್ ಅವರನ್ನು ಹೈಕೋರ್ಟ್ ಪ್ರಶ್ನಿಸಿದೆ.
ಹೈಕೋರ್ಟ್ ಪ್ರಶ್ನೆಗೆ ಉತ್ತರಿಸಿದ ಅಶೋಕ್ ನಾಯಕ್, “ಈ ಕುರಿತು ಸಂಬಂಧಿಸಿದವರ ಜೊತೆಗೆ ಅಡ್ವೊಕೇಟ್ ಜನರಲ್ ಮಾತುಕತೆ ನಡೆಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದ್ದಾರೆ.