ಮಂಡ್ಯ ತಾಲೂಕಿನ ಹನಕೆರೆ ಬಳಿ ನಿನ್ನೆ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಬಳಿಕ ಹೆದ್ದಾರಿ ಪ್ರಾಧಿಕಾರದವರು ಅಂಡರ್ಪಾಸ್ ನಿರ್ಮಾಣ ಮಾಡುವ ಆದೇಶ ಪ್ರತಿಯನ್ನು ಕಳುಹಿಸಿದ್ದಾರೆ. ಮೊದಲೇ ಕಳುಹಿಸಿದ್ದರೆ ನಾವು ಪ್ರತಿಭಟನೆ ಮಾಡುತ್ತಿರಲಿಲ್ಲ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಸರ್ವೋದಯ ಕರ್ನಾಟಕ ಪಕ್ಷದ ರೈತ ಮುಖಂಡಎಸ್.ಸಿ. ಮಧುಚಂದನ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಅಂಡರ್ಪಾಸ್ ನಿರ್ಮಾಣ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಕಳೆದ ಒಂದು ವಾರದ ಹಿಂದೆಯೇ ಘೋಷಣೆ ಮಾಡಿದ್ದೆವು. ಆದರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಹೆದ್ದಾರಿ ಪ್ರಾಧಿಕಾರದವರು ಎರಡೂ ಕಡೆ ಫೆನ್ಸಿಂಗ್ ಮಾಡಿದ ಬಳಿಕ ಜನರಿಗೆ ಓಡಾಡಲು ಕಷ್ಟವಾಯಿತು. ಇದರಿಂದ ರೊಚ್ಚಿಗೆದ್ದ ರೈತರು ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಯಿತು ಎಂದು ಸಮರ್ಥಿಸಿಕೊಂಡರು.
ಪ್ರತಿಭಟನೆ ನಂತರ ಎಚ್ಚೆತ್ತ ಅಧಿಕಾರಿಗಳು ಅಂಡರ್ಪಾಸ್ ನಿರ್ಮಾಣ ಮಾಡುವುದಾಗಿ ಈಗ ಹೇಳುತ್ತಾರೆ. ಫೆ. 14ರಂದು ಆದೇಶ ಹೊರಡಿಸಲಾಗಿದೆ ಎಂದು ಹೇಳುತ್ತಾರೆ. ಶಾಸಕರು ಫೆ. 17ರಂದು ಪತ್ರ ವ್ಯವಹಾರ ಮಾಡಿದ್ದರು. ಅಂದರೆ ಶಾಸಕರಿಗೂ ಈ ವಿಚಾರ ತಿಳಿದಿಲ್ಲ ಎಂದು ಹೇಗೆ ಎಂದು ಪ್ರಶ್ನಿಸಿದ ಅವರು, ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಹೆದ್ದಾರಿ ಕಾಮಗಾರಿ ಬಗ್ಗೆ ಯಾವುದೇ ನಕಾಶೆಯನ್ನೂ ಬಿಡುಗಡೆ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದರಿಂದಲೇ ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ. ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳ ನಿರ್ಲಕ್ಷ್ಯ, ಬೇಜಬ್ದಾರಿಯಿಂದ ಸಹಸ್ರಾರು ಮಂದಿ ಬೀದಿಗೆ ಬಿದ್ದಿದ್ದಾರೆ ಎಂದು ಆರೋಪಿಸಿದರು.
ಮುಖಂಡರಾದ ನಾಗರಾಜು, ಶ್ರೀಕಾಂತ್, ಸತೀಶ್, ಸಿದ್ದೇಗೌಡ ಗೋಷ್ಠಿಯಲ್ಲಿದ್ದರು.