ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು ವಿರುದ್ದ ಅಕ್ರಮ ಆಸ್ತಿ ಸಂಪಾದನೆ, ರಾಜಧನ ವಂಚನೆ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಕೆ.ಆರ್.ರವೀಂದ್ರ ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಹೆಚ್.ಟಿ. ಮಂಜು 2005 ರಲ್ಲಿ ಶೀಳನೆರೆ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡು, 2015ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಜೆ.ಡಿ.ಎಸ್ ಪಕ್ಷದಿಂದ ಗೆದ್ದು, ಹಾಲಿ ಮಂಡ್ಯ ಕೆ.ಎಂ.ಎಫ್ ನಿರ್ದೇಶಕರಾಗಿದ್ದಾರೆ. ಅಲ್ಲದೇ ಇವರ ಸ್ವಂತ ಗ್ರಾಮವಾದ ಹರಳಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದರು. ಈಗ ಇವರ ತಮ್ಮ ಹೆಚ್.ಟಿ.ಲೋಕೇಶ್ ಹಾಲಿ ಅಧ್ಯಕ್ಷರಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹರಳಹಳ್ಳಿ ಗ್ರಾಮದ ಸರ್ವೇ ನಂ.222 ರಲ್ಲಿ ಹೆಚ್.ಟಿ.ಮಂಜು ಟಿ.ಜೆ.ಸ್ಟೋನ್ ಕ್ರಷರ್ ನಡೆಸುತ್ತಿದ್ದು, ರಾಜ್ಯ ಸರ್ಕಾರಕ್ಕೆ ರಾಜಧನವನ್ನು ವಂಚಿಸಿ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಹಣ ಸಂಪಾದಿಸಿದ್ದು, ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕೋಟ್ಯಾಂತರ ರೂ. ದಂಡ ವಿಧಿಸಿದೆ. ಆದರೆ ಚುನಾವಣಾ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರದಲ್ಲಿ ಈ ದಂಡ ಕಟ್ಟಿರುವ ಬಗ್ಗೆ ಮಾಹಿತಿ ನೀಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.