ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ವಾಸ್ತವಿಕತೆ ಕುರಿತು ಅಧ್ಯಯನ ನಡೆಸಲು ಮಂಡ್ಯ ಜಿಲ್ಲಾ ಜೆಡಿಎಸ್ ವತಿಯಿಂದ ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ ಸಿ ತಮ್ಮಣ್ಣ ಹಾಗೂ ಮಾಜಿ ಶಾಸಕರು ಜ.10ರ ಶನಿವಾರ ನಮ್ಮ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶಾಸಕ ಹೆಚ್ ಟಿ ಮಂಜು ತಿಳಿಸಿದರು.
ಕೆ.ಆರ್.ಪೇಟೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿಗೆ ಸಂತೆಬಾಚಹಳ್ಳಿ ಹೋಬಳಿ ಗ್ರಾಮಗಳಲ್ಲಿ ಒಡೆದ ಕೆರೆಯನ್ನು ವೀಕ್ಷಣೆ ಮಾಡಿ ನಂತರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸಂಚರಿಸಿ ಬರ ಅಧ್ಯಯನ ಮಾಡಲಾಗುತ್ತದೆ. ಸಂಕಷ್ಟದಲ್ಲಿರುವ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುವುದು. ರೈತರೊಂದಿಗೆ ನೇರವಾಗಿ ಸಂಬಂಧಿಸಿದ ಇಲಾಖೆಗಳಿಂದ ನಷ್ಟದ ವರದಿ ಪಡೆದು ಚರ್ಚಿಸಲಾಗುವುದು ಎಂದರು.
ಗಡಿಗ್ರಾಮ ಜಿ ಬೊಪ್ಪನಹಳ್ಳಿ ಗ್ರಾಮದ ಸಮೀಪಕ್ಕೆ ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ ಸಿ ತಮ್ಮಣ್ಣ, ಮಾಜಿ ಶಾಸಕರಾದ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಸುರೇಶಗೌಡ ಹಾಗೂ ಮನ್ಮುಲ್ ಮಾಜಿ ಅಧ್ಯಕ್ಷ ಬಿ ಆರ್ ರಾಮಚಂದ್ರು ಅವರು ಬರ ಅಧ್ಯಯನ ನಡೆಸಲಿದ್ದಾರೆ. ನಂತರ ಪಕ್ಷದ ವರಿಷ್ಠರ ಗಮನಕ್ಕೆ ತಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಆದ್ದರಿಂದ ರೈತರು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಕಾನೂನು ಘಟಕದ ಅಧ್ಯಕ್ಷ ವಕೀಲ ಧನಂಜಯ್ ಕುಮಾರ್, ತಾ.ಪಂ.ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಟಿಎಪಿಸಿಎಂಎಸ್ ನಿರ್ದೇಶಕ ತೆರ್ನೇನಹಳ್ಳಿ ಬಲದೇವ್, ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಸಮಿತಿ ಸದಸ್ಯ ರವಿಕುಮಾರ್, ಪುರಸಭಾ ಸದಸ್ಯ ಗಿರೀಶ್ ಮತ್ತಿತರರು ಭಾಗವಹಿಸಿದ್ದರು.