ವರದಿ : ಪ್ರಭು ವಿ ಎಸ್
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಸಂಪೂರ್ಣ ಸಾಲಮನ್ನಾ ಮಾಡಲಾಗುವುದು ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.
ಮದ್ದೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಜನ ಸಂಪರ್ಕ ಸಭೆ ನಡೆಸಿ ಮಾತನಾಡಿದ ಅವರು, ಸಾಲ ಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಹಿಳೆಯರ ಬದುಕನ್ನು ಹಸನಗೊಳಿಸಬೇಕೆಂಬ ಸದುದ್ಧೇಶದಿಂದ ಸಾಲ ಮನ್ನಾ ಮಾಡಿ ಮಹಿಳೆಯರ ಆರ್ಥಿಕ ಬಲವರ್ಧನೆ ಮಾಡುವುದಾಗಿ ಹೇಳಿದರು.
ಕ್ಷೇತ್ರದ ಮತದಾರರು ಪ್ರಾದೇಶಿಕವಾದ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಕುಮಾರಸ್ವಾಮಿ ಅವರ ಕೈ ಬಲಪಡಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು. ಕ್ಷೇತ್ರದ ಅಭಿವೃದ್ಧಿಗೆ ತಾವು ಶಕ್ತಿಮೀರಿ ಶ್ರಮಿಸುತ್ತಿದ್ದು ಈಗಾಗಲೇ ಶಿಕ್ಷಣ ಕ್ಷೇತ್ರ ಸೇರಿದಂತೆ ರಸ್ತೆ, ನಾಲೆ ಆಧುನೀಕರಣದ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇನೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತಮ್ಮನ್ನು ಬೆಂಬಲಿಸಿ, ತಮ್ಮ ಗೆಲುವಿಗೆ ಶ್ರಮಿಸಬೇಕೆಂದು ಕೋರಿದರು.
ಗುದ್ದಲಿ ಪೂಜೆ
ಮದ್ದೂರು ತಾಲ್ಲೂಕಿನ ಕುದುರಗುಂಡಿ ಕಾಲೋನಿ, ಬಸವನಪುರ ಗ್ರಾಮದಲ್ಲಿ 16 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಇದೇ ವೇಳೆ ಗುದ್ದಲಿ ಪೂಜೆ ನೆರವೇರಿಸಿದರು. ಗೆಜ್ಜಲಗೆರೆ, ಸಾದೊಳಲು, ಕುದುರಗುಂಡಿ, ಬಸವನಪುರ, ಬೋರಪುರ ಇನ್ನಿತರ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿ, ಅಧಿಕಾರಿಗಳಿಗೆ ಅಭಿವೃದ್ಧಿ ಕೆಲಸಗಳ ಬಗ್ಗೆ ಸೂಚನೆ ನೀಡಿದರು.
ಜನ ಸಂಪರ್ಕ ಸಭೆ ವೇಳೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕತಮ್ಮೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಮಲ್ಲರಾಜು, ಶಿವನಂಜಯ್ಯ, ಮನ್ ಮುಲ್ ಮಾಜಿ ಉಪಾಧ್ಯಕ್ಷ ಉಮೇಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.