ಪ್ರಸಕ್ತ ಸಾಲಿನ ಕಬ್ಬುವ ಅರೆಯುವ ಕಾರ್ಯಕ್ಕೆ ಜುಲೈ ಎರಡನೇ ವಾರದಲ್ಲಿ ಚಾಲನೆ ನೀಡಲಿದ್ದು, ಜೂ. 30ರಂದು ಮೈಷುಗರ್ ಬಾಯ್ಲರ್ಗೆ ಅಗ್ನಿಸ್ಪರ್ಶ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ತಿಳಿಸಿದರು.
ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದ್ದು, ಈಗಾಗಲೇ 1.90 ಲಕ್ಷ ಟನ್ ಕಬ್ಬು ಒಪ್ಪಿಗೆ ಮಾಡಿಕೊಳ್ಳಲಾಗಿದೆ ಎಂದು ಮಂಡ್ಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ಬಾರಿ ಸರಿಯಾಗಿ ಮಳೆ ಬಾರದ ಕಾರಣ ಕಬ್ಬಿನ ಕೊರತೆ ಕಂಡುಬಂದಿದ್ದು, ಆದರೂ ಕಾರ್ಖಾನೆ 2,41,305 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿತ್ತು. ಕಬ್ಬು ಸರಬರಾಜು ಮಾಡಿದ ಎಲ್ಲ ರೈತರಿಗೂ ಸಂಪೂರ್ಣ ಹಣವನ್ನು ಪಾವತಿಸಲಾಗಿದೆ ಎಂದರು.
ಈ ಬಾರಿ ಕಬ್ಬಿನ ಕೊರತೆ ಎದುರಾಗುವ ಸಾಧ್ಯತೆಗಳಿದ್ದು, ಹೊರ ಜಿಲ್ಲೆಯಿಂದ ಕಬ್ಬು ತಂದು ನುರಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಕಾರ್ಖಾನೆಯ ಸಹ ವಿದ್ಯುತ್ ಘಟಕವನ್ನೂ ಆರಂಭಿಸಿ ಕಾರ್ಖಾನೆಗೆ ಅಗತ್ಯವಿರುವ ವಿದ್ಯುತ್ತನ್ನು ಇಟ್ಟುಕೊಂಡು ಉಳಿದ್ದನ್ನು ಸೆಸ್ಕ್ ಗೆ ಮಾರಾಟ ಮಾಡಲಾಗುವುದು. ಕಳೆದ ಬಾರಿ ಅಂತಿಮ ಹಂತದಲ್ಲಿ ಸ್ವಲ್ಪ ಪ್ರಮಾಣದ ವಿದ್ಯುತ್ತನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಮೈಶುಗರ್ಗೆ ಲಾಭ ಬಂದಿದೆ ಎಂದು ತಿಳಿಸಿದರು.
ಟನ್ ಕಬ್ಬಿಗೆ ₹3,150 ನಿಗದಿ
ಪ್ರಸಕ್ತ ಸಾಲಿನಲ್ಲಿ ಟನ್ ಟನ್ ಕಬ್ಬಿಗೆ 3,150 ರೂ.. ಎಫ್.ಆರ್.ಪಿ. ನಿಗದಿ ಮಾಡಲಾಗಿದ್ದು, ಸರ್ಕಾರ ನಿಗದಿಪಡಿಸಿರುವ ದರವನ್ನು ನೀಡಲಾಗುತ್ತದೆ. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ 10 ದಿನಗಳೊಳಗೆ ಪಾವತಿಸಲಾಗುವುದು ಎಂದು ಹೇಳಿದರು.
ಆಲೆಮನೆ ಮಾಲೀಕರೊಂದಿಗೆ ಸಭೆ
ಕಬ್ಬಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಆಲೆಮನೆ ಮಾಲೀಕರ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಪರವಾನಗಿ ಇರುವ ಆಲೆಮನೆಗಳು ಮಾತ್ರ ಬೆಲ್ಲ ಉತ್ಪಾದನೆ ಮಾಡಬೇಕು. ಉಳಿದವರು ಮಾಡಬಾರದು ಎಂದು ಮನವಿ ಮಾಡಲು ಚಿಂತನೆ ನಡೆಸಲಾಗಿದೆ. ಮೈಶುಗರ್ ಉಳಿವಿಗೆ ಎಲ್ಲರ ಸಹಕಾರ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಾಸಕ ಪಿ. ರವಿಕುಮಾರ್ ಮಾತನಾಡಿ, ಮೈಶುಗರ್ ವ್ಯಾಪ್ತಿಯಲ್ಲಿ ಇತರೆ ಖಾಸಗಿ ಕಾರ್ಖಾನೆಗಳವರು ಕಬ್ಬು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ತಡೆಯಲು ಈಗಾಗಲೇ ಜಾಗೃತ ದಳವನ್ನೂ ರಚಿಸಲಾಗಿದೆ. ಒಂದು ವೇಳೆ ಇಂತಹ ಕಾನೂನುಬಾಹಿರ ಕೃತ್ಯಗಳು ಕಂಡುಬAದಲ್ಲಿ ಅವರ ಪರವಾನಗಿ ರದ್ದುಪಡಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಖಂಡರಾದ ಉಮೇಶ್, ದೇಶಹಳ್ಳಿ ಮೋಹನ್ಕುಮಾರ್, ಚಂದ್ರಶೇಖರ್ ಗೋಷ್ಠಿಯಲ್ಲಿದ್ದರು.