ಮಳವಳ್ಳಿ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟದ ಜೊತೆಗೆ ನಕಲಿ ಮದ್ಯದ ಪ್ರಕರಣಗಳು ಸಹ ಅಲ್ಲಲ್ಲಿ ಕಂಡುಬರುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ ಕುರಿತು ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಪಿ. ಎಂ. ನರೇಂದ್ರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು ಕೆಲ ಗ್ರಾಮಗಳಲ್ಲಿ ಈಗಲೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಈ ಬಗ್ಗೆ ಸ್ಥಳೀಯ ಪೊಲೀಸರು ದಾಳಿ ಮಾಡಿ ಪ್ರಕರಣ ಪತ್ತೆ ಹಚ್ಚಿದ್ದಾರೆ ನೀವು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಬಕಾರಿ ನಿರೀಕ್ಷಕರಾದ ಭಾಗ್ಯಲಕ್ಷ್ಮಿ ಅವರನ್ನು ಪ್ರಶ್ನಿಸಿದರು. ಜೊತೆಗೆ ನಕಲಿ ಮದ್ಯ ಹಾವಳಿ ಸಹ ಅಲ್ಲಲ್ಲಿ ಬೆಳಕಿಗೆ ಬರುತ್ತಿದ್ದು ಈ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ ಕೈಕೊಳ್ಳುವಂತೆ ಸೂಚಿಸಿದರು.
ಶಾಲೆಗಳು ಪ್ರಾರಂಭವಾಗಿ ತಿಂಗಳುಗಳೇ ಕಳೆಯುತ್ತಿದ್ದರು ಕೆಲ ವಿದ್ಯಾರ್ಥಿ ನಿಲಯಗಳು ಸರಿಯಾಗಿ ತೆರೆಯದೇ ಇರುವ ಕುರಿತು ಸಿಡಿ ಮಿಡಿಗೊಂಡ ನರೇಂದ್ರಸ್ವಾಮಿ, ವಿದ್ಯಾರ್ಥಿ ನಿಲಯ, ಅಂಗನವಾಡಿ ಕೇಂದ್ರಗಳಿಗೆ ತಾ.ಪಂ. ಇಒ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಮಕ್ಕಳಿಗೆ ಗುಣಮಟ್ಟದ ಆಹಾರ ವಿತರಣೆಯಾಗುತ್ತಿರುವ ಕುರಿತು ಪರಿಶೀಲನೆ ನಡೆಸದಿರುವ ಬಗ್ಗೆ ಶಾಸಕರು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ವೈಧ್ಯರು ಬಡ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ರಿಲ್ಲ ಎಂಬ ದೂರಿನ ಬಗ್ಗೆ ಸಹ ಅಗತ್ಯ ಕ್ರಮ ಕೈಗೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ ವೀರಭದ್ರಪ್ಪ ಅವರಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ ಸಂಜಯ್ ಅವರು ಕಳೆದ 2023 ವರೆಗೂ ಕುಂಟುತ್ತಾ ಸಾಗಿದ್ದ ಆಸ್ಪತ್ರೆಯ ಕಟ್ಟಡ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಮುಗಿಸುವ ಕ್ರಮ ಕೈಗೊಂಡಿದ್ದು ರೋಗಿಗಳಿಗೆ ಅಗತ್ಯವಿರುವ ಐಸಿಯು ವಾಡ್೯, ಡಯಾಲಿಸೀಸ್ ಸೆಂಟರ್, ಉನ್ನತ ತಾಂತ್ರಿಕ ಲ್ಯಾಬ್ ಸೇರಿದಂತೆ ಹಲವು ಸೇವೆಗಳ ವಿಸ್ತರಣೆಗೆ ಕ್ರಮ ವಹಿಸಲಾಗಿದೆ ಎಂದರು.
ಸಭೆಯಲ್ಲಿ ತಾ.ಪಂ. ಇಒ ಮಮತ, ತಹಶಿಲ್ದಾರ್ ಲೋಕೇಶ್, ಡಿವೈಎಸ್ಪಿ ಕೃಷ್ಣಪ್ಪ ಮತ್ತಿತರರು ಹಾಜರಿದ್ದರು.