ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಕೆಟ್ ಕೋರಿ ಅರ್ಜಿ ಸಲ್ಲಿಸುತ್ತಿರುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರ ಕುಟುಂಬದ ಕುಡಿ ಗುರುಚರಣ್ ಅವರಿಗೆ ತಳಮಳ ಶುರುವಾಗಿದೆ.
ಯುವನಾಯಕ ಕದಲೂರು ಉದಯ್ ಕೂಡ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿ ಎಂಬ ಸುದ್ದಿಗಳೂ ಕೂಡ ಹರಿದಾಡುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದ ವಿ.ಸಿ. ಬೋರೇಗೌಡರ ಕುಟುಂಬದ ಕುಡಿ ವಿ. ಸಿ. ಶಂಕರೇಗೌಡರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿ ಅರ್ಜಿ ಸಲ್ಲಿಸಿರುವುದು ಮದ್ದೂರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಕ್ಷದಲ್ಲಿ ಬಂಡಾಯದ ಭೀತಿ ಎದುರಾಗಿದೆ. ಯಾರು ಪಕ್ಷದ ಅಭ್ಯರ್ಥಿಯಾಗುವರೋ, ಯಾರು ಬಂಡಾಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗೆ ಸೆಡ್ಡು ಹೊಡೆಯುವರೋ ಎಂಬ ಪ್ರಶ್ನೆ ಜನರಲ್ಲಿ ಕುತೂಹಲ ಮೂಡಿಸಿದೆ.
ತಾಲೂಕಿನ ವಳಗೆರೆಹಳ್ಳಿ ಗ್ರಾಮದ ದಿವಂಗತ ವಿ.ಸಿ. ಬೋರೇಗೌಡರವರ ಪುತ್ರರಾದ ಬಿ.ವಿ. ಶಂಕರೇಗೌಡರವರು ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿ ಬಿ.ಫಾರಂ ಕೋರಿ ತಮ್ಮ ಪತ್ನಿ ಮಮತಾ ಅವರ ಜೊತೆಗೂಡಿ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೆ ಮದ್ದೂರು ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆ,ಸೂಚನೆಯ ಮೇರೆಗೆ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದೇನೆ. ದಿವಂಗತ ವಿ.ಸಿ. ಬೋರೇಗೌಡರವರ ಕುಟುಂಬಕ್ಕೆ ಸುಮಾರು 75 ವರ್ಷಗಳ ರಾಜಕೀಯ ಇತಿಹಾಸವಿದ್ದು, ಕಾಂಗ್ರೆಸ್ ಪಕ್ಷದ ಏಳಿಗೆಗೆ ಶ್ರಮಿಸುತ್ತ ಬರುತ್ತಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ವರಿಷ್ಠರು ಬಿ.ಫಾರಂ ನೀಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಮದ್ದೂರು ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬ ಕುತೂಹಲ ಜನರಲ್ಲಿದೆ.