ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಜಿಲ್ಲಾ ಆಶ್ರಿತ ಕೀಟವಾಹಕ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಭವಾನಿಶಂಕರ್ ತಿಳಿಸಿದರು.
ನಗರದ ಸಂಜಯ ವೃತ್ತದಲ್ಲಿ ಮಲೇರಿಯಾ ವಿರೋಧ ಮಾಸಾಚರಣೆ ಮತ್ತು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಲೇರಿಯ ವಿರೋಧಿ ಮಾಸಾಚರಣೆ ಪ್ರಯುಕ್ತ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಂದ ಪ್ರತಿ ಶಾಲೆಯಿಂದ ಕನಿಷ್ಠ ಒಬ್ಬರು ಉಪಾಧ್ಯಾಯರು, ಶಿಕ್ಷಕರುಗಳಿಗೆ ಮಲೇರಿಯಾ ರೋಗದ ಲಕ್ಷಣ, ಚಿಕಿತ್ಸಾ ಕ್ರಮ, ಹರಡುವ ವಿಧಾನ ಮತ್ತು ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮಗಳ ಬಗ್ಗೆ ಸ್ಥಳೀಯ ವೈದ್ಯಾಧಿಕಾರಿಗಳು ಕಾರ್ಯಾಗಾರ ನಡೆಸಿ ಮಾಹಿತಿ ನೀಡಿದ್ದಾರೆ.
ನಂತರ ಶಿಕ್ಷಕರು ತಮ್ಮ ಶಾಲಾ-ಕಾಲೇಜು ಮಕ್ಕಳಿಗೆ ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳ ಕುರಿತು ಸವಿವರವಾಗಿ ಮಾಹಿತಿ ನೀಡಿ ರೋಗ ಹರಡದಂತೆ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು.
ಮನೆಯ ಸುತ್ತಮುತ್ತ ಬಿಸಾಡಿರುವ ಅನುಪಯುಕ್ತ ವಸ್ತುಗಳಾದ ಪ್ಲಾಸ್ಟಿಕ್ ವಸ್ತುಗಳು, ಗಾಜಿನ ವಸ್ತುಗಳು, ಟೈರುಗಳು, ಒರಳು ಕಲ್ಲುಗಳು ಇತ್ಯಾದಿಗಳಲ್ಲಿ ಮಳೆಯ ನೀರು ಸಂಗ್ರಹವಾಗಿ ಮಲೇರಿಯಾ, ಡೆಂಗ್ಯೂ ರೋಗಗಳು ಪ್ರಸರಣಗೊಳಿಸುವಂತಹ ಈಡಿಸ್ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುವುದರಿಂದ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ರೋಗ ಹರಡಲು ಕಾರಣವಾಗಿದೆ ಎಂದರು.
ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆಗಳು, ಸೊಳ್ಳೆ ನಿರೋಧಕಗಳನ್ನು ಬಳಸಬೇಕು. ಯಾವುದೇ ಜ್ವರ ಬಂದರೆ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಸಂಶಯಾಸ್ಪದ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಪ್ರಯೋಗಾಲಯದಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಮಾಡಲಾಗುತ್ತಿದೆ, ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಆರ್ ಸಿ ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು ಕುಟುಂಬ ಕಲ್ಯಾಣಾಧಿಕಾರಿ ಡಾ. ಆಶಾಲತಾ, ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ. ಶಶಿಧರ್, ಡಾ. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಜವರೇಗೌಡ, ಕೀಟ ಶಾಸ್ತ್ರಜ್ಞೆ ಜಾನೆಟ್, ಮಂಗಳ ಬಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸೋಮಶೇಖರ್, ಶಂಭುಲಿಂಗೇಗೌಡ, ಹಾಗೂ ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.