ಕಬ್ಬು ಬೆಳೆಗೆ ದರ ನಿಗಧಿ ಸೇರಿದಂತೆ ರೈತರ ಎಲ್ಲಾ ಸಮಸ್ಯೆಗಳ ಬಗ್ಗೆ ಮುಂದಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದೊಂದಿಗೆ ಗಂಭೀರ ಚರ್ಚೆ ನಡೆಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮಂಡ್ಯದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಕಳೆದ 8 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.
ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡಿದ್ದು, ಬಿಟ್ಟರೆ ಇರುವರೆಗೆ ಸರ್ಕಾರ ಬೆಂಬಲ ಬೆಲೆಯನ್ನು ನೀಡಿಲ್ಲ, ಇದು ಸಾಕಾಗುವುದಿಲ್ಲ ಎಂದು ಈಗಾಗಲೇ ಸರ್ಕಾರಕ್ಕೆ ಹೇಳಿದ್ದೆ, ಈಗಿನ ಮುಖ್ಯಮಂತ್ರಿಗಳು, ಸಚಿವರು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ, ಸರ್ಕಾರದಲ್ಲಿ ರೈತ ಪರವಾದ ಯಾವುದೇ ನಿರ್ಧಾರಗಳು ಆಗುತ್ತಿಲ್ಲ ಎಂದು ಕಿಡಿಕಾರಿದರು.
ರೈತರ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿವೆ, ಈ ಬಗ್ಗೆ ಸರ್ಕಾರದೊಂದಿಗೆ ಗಂಭೀರ ಚರ್ಚೆ ನಡೆಸುತ್ತೇನೆ ಎಂದ ಅವರು, ಈಗ ಕೃಷಿ ಖರ್ಚು ವೆಚ್ಚ ಹೆಚ್ಚಾಗಿದೆ, ರಸಗೊಬ್ಬರಗಳ ಮೇಲೆ 3 ಪಟ್ಟು ಹೆಚ್ಚಾಗಿದೆ, ಹೀಗಿರುವಾಗ ಸರ್ಕಾರ ಕಬ್ಬಿಗೆ ನಿಗದಿ ಮಾಡಿರುವ 3,000 ರೂ. ಯಾವುದಕ್ಕೂ ಸಾಲುವುದಿಲ್ಲ. ನನ್ನ ಅವದಿಯಲ್ಲಿ ಹಾಲಿನ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿದ್ದೆ, ಅದು ಬಿಟ್ಟರೆ ಸರ್ಕಾರ ಮತ್ತೆ ದರ ಹೆಚ್ಚಳ ಮಾಡಿಲ್ಲ, ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಆರ್ಶೀವಾದ ಮಾಡಿದರೆ ಹಾಲಿನ ದರ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ರೈತಸಂಘದ ಸಂಘಟನಾ ಕಾರ್ಯದರ್ಶಿ ಮಧುಚಂದನ್ ಅವರು, ರೈತರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು, ಅಲ್ಲದೇ ಮುಂಬರುವ ಅಧಿವೇಶನದಲ್ಲಿ ರೈತರ ಪರವಾಗಿ ಅಧಿವೇಶನದಲ್ಲಿ ಮಾತನಾಡಿ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದರು.
ಹೈಕಮಾಂಡ್ ಹೇಳಿದಲ್ಲಿ ಸ್ಪರ್ಧೆ
ಕೋಲಾರದಲ್ಲಿ ಸ್ಪರ್ಧೆ ಮಾಡಿವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಹೇಳಿದ್ದಲ್ಲಿ ಸ್ಪರ್ಧೆ ಮಾಡುತ್ತೇನೆ, ಎಲ್ಲಿ ಸ್ಪರ್ಧೆ ಮಾಡುವುದು ಎಂದು ಇನ್ನೂ ತೀರ್ಮಾನವಾಗಿಲ್ಲ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಎಂ.ಎಸ್.ಆತ್ಮಾನಂದ ಮತ್ತಿತರರು ಉಪಸ್ಥಿತರಿದ್ದರು.