ಮಂಡ್ಯ ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಾಳೆ (ಜುಲೈ 5 ರಂದು) ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಂಡ್ಯ ಜಿಲ್ಲಾಡಳಿತವು ಸಕಲ ಸಿದ್ದತೆ ಕೈಗೊಂಡಿದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜನತಾದರ್ಶನ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಜನರ ಸಮಸ್ಯೆಗಳನ್ನು ಸಚಿವ ಕುಮಾರಸ್ವಾಮಿ ಆಲಿಸಲಿದ್ದಾರೆ.
ಈ ಕಾರ್ಯಕ್ರಮದ ಸಿದ್ದತೆಯನ್ನು ಪರಿಶೀಲಿಸಿ ಮಾತನಾಡಿದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು, ಜನತಾ ದರ್ಶನಕ್ಕೆ ಆಗಮಿಸುವ ಜನತೆ ಕುಡಿಯುವ ನೀರು, ಮಧ್ಯಾಹ್ನ ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷವಾಗಿ ಅಂಗವಿಕಲರಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದರು.
ಕುಮಾರಸ್ವಾಮಿ ಅವರು 2 ಬಾರಿ ಸಿಎಂ ಆಗಿ ಜನರ ಸಮಸ್ಯೆಯನ್ನು ನಿರಂತರವಾಗಿ ಆಲಿಸುತ್ತಿದ್ದಾರೆ. ಅದೇ ರೀತಿ ಮಂಡ್ಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ನಂತರ ಪ್ರಪ್ರಥಮವಾಗಿ ಜಿಲ್ಲೆಯಲ್ಲಿ ಜನತಾ ದರ್ಶನ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಕುಮಾರಸ್ವಾಮಿ ಅವರ ಬಳಿಯಲ್ಲಿ ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಜಿಲ್ಲಾಡಳಿತದ ತೀರ್ಮಾನಕ್ಕೆ ಬದ್ದ
ಕೆ.ಆರ್.ಎಸ್ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಬೇಕೋ ಬೇಡವೋ ಎನ್ನುವುದರ ಬಗ್ಗೆ ಮಂಡ್ಯ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳಲಿದೆ. ಆ ತೀರ್ಮಾನಕ್ಕೆ ನಾವು ಬದ್ದರಾಗಿರುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.