ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರ ಬದುಕು ದುಸ್ತರವಾಗಿದ್ದು, ಜನಪರ ಯೋಜನೆಗಳ ಅನುಷ್ಠಾನಕ್ಕೆ ಕಾಂಗ್ರೆಸ್ ಪಕ್ಷವನ್ನು ಜಬತೆ ಬೆಂಬಲಿಸಬೇಕೆಂದು ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಮನವಿ ಮಾಡಿದರು.
ಮಂಡ್ಯ ತಾಲೂಕಿನ ಶ್ರೀನಿವಾಸಪುರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್ ವಿತರಿಸಿ ಅವರು ಮಾತನಾಡಿದರು.
ಗೃಹಿಣಿಯ ಬ್ಯಾಂಕ್ ಖಾತೆಗೆ 2000 ರೂ. ಹಣ
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುತ್ತದೆ. ಪ್ರತಿ ತಿಂಗಳು ಕುಟುಂಬದ ಗೃಹಿಣಿಯ ಬ್ಯಾಂಕ್ ಖಾತೆಗೆ 2000 ರೂ. ಹಣ ನೀಡಲಾಗುವುದು. ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿಯೊಬ್ಬ ವ್ಯಕ್ತಿಗೂ ತಲಾ 10 ಕೆ.ಜಿ ಅಕ್ಕಿ ನೀಡಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಈ ಎಲ್ಲಾ ಕೊಡುಗೆಗಳು ಜನರಿಗೆ ಸಿಗಲಿವೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಜನಸಾಮಾನ್ಯರ ಸರ್ಕಾರ ತರಲು ಕಾರಣವಾಗಬೇಕೆಂದು ಕೋರಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ರಾಜ್ಯದ ಜನರ ಜನರಿಗೆ ಇನ್ನಷ್ಟು ಕೊಡುಗೆಗಳನ್ನು ನೀಡಲಿದ್ದಾರೆ. ಈ ಹಿಂದೆ 2013ರಲ್ಲಿ ಕಾಂಗ್ರೆಸ್ ಪಕ್ಷ ಸುಮಾರು 168 ಅಭಿವೃದ್ಧಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರಲ್ಲಿ 158 ಯೋಜನೆಗಳನ್ನು ಜನರಿಗೆ ನೀಡಿ ಜನರ ವಿಶ್ವಾಸ ಉಳಿಸಿಕೊಂಡಿತು. ಈ ಬಾರಿಯೂ ಪಕ್ಷವನ್ನು ಅಧಿಕಾರಕ್ಕೆ ತಂದರೆ ರಾಜ್ಯ ಮತ್ತು ಜನರ ಅಭಿವೃದ್ಧಿ ತ್ವರಿತ ಗತಿಯಲ್ಲಿ ನಡೆಯಲಿದೆ ಎಂದರು.
ಬಿಜೆಪಿ ಸರ್ಕಾರದಲ್ಲಿ ಜನರು ಬದುಕುವುದೇ ಕಷ್ಟ
ಬಿಜೆಪಿ ಸರ್ಕಾರದಲ್ಲಿ ಜನರು ಬದುಕುವುದೇ ಕಷ್ಟವಾಗಿದೆ. 50-60 ರೂ. ಇದ್ದ ಪೆಟ್ರೋಲ್ ಬೆಲೆ 110 ರೂ. ಆಗಿದೆ. ಸಿಲಿಂಡರ್ ಬೆಲೆ 450 ರಿಂದ 1200 ರೂ.ಗಳಿಗೆ ಏರಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನಸಾಮಾನ್ಯರು ಬದುಕುವುದೇ ದುಸ್ತರವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಜನಸಾಮಾನ್ಯರ ಬದುಕಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಅಮರಾವತಿ ಅಶ್ವಥ್, ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಜಲಕ್ಷ್ಮಿ, ಮುಖಂಡರಾದ ಕೃಷ್ಣಪ್ಪ, ಶೇಖರಪ್ಪ, ಕೃಷ್ಣೇಗೌಡ, ಮಹೇಶ್, ರಾಜು, ರಾಧಾ ಮತ್ತಿತರರು ಇದ್ದರು.