ರಾಜ್ಯದ ಕಾಂಗ್ರೆಸ್ ಸರ್ಕಾರವು ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತಪರ ಕಾರ್ಯಕ್ರಮಗಳನ್ನು ಮುಂದುವರೆಸಬೇಕೆಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಜೋಗಿಗೌಡ ಒತ್ತಾಯಿಸಿದರು.
ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತಪರವಾಗಿದ್ದ ಎಪಿಎಂಸಿ ಕಾಯ್ದೆ ರದ್ದು, ವಿದ್ಯುತ್ ದರ ಏರಿಕೆ, ರೈತ ವಿದ್ಯಾನಿಧಿ, ಜಿಲ್ಲೆಗೊಂದು ಗೋಶಾಲೆ, ಭೂಸಿರಿ, ಕಿಸಾನ್ ಸಮ್ಮಾನ್, ರೈತಶಕ್ತಿ, ಕೃಷಿ ಭೂಮಿ ಮಾರಾಟ ಕಾಯ್ದೆ ಸೇರಿದಂತೆ ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡಿರುವುದು ಸರಿಯಲ್ಲ. ಕೂಡಲೇ ಈ ಎಲ್ಲ ಯೋಜನೆಗಳನ್ನು ಮುಂದುವರೆಸಬೇಕು ಎಂದರು.
ಮೈಷುಗರ್ ಕಾರ್ಖಾನೆಯ ಪ್ರಾರಂಭದ ಜೊತೆಗೆ ತುರ್ತಾಗಿ ಎಥೆನಾಲ್ ಘಟಕ ಆರಂಭಿಸಬೇಕು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ. ಮದ್ದೂರು ಹಾಗೂ ಮಳವಳ್ಳಿಯಲ್ಲಿ ರೇಷ್ಮೆ ನೂಲು ನೇಯ್ಗೆ ಘಟಕ ಆರಂಭಿಸಬೇಕು. ನಾಗಮಂಗಲ ಹಾಗೂ ಕೆ.ಆರ್.ಪೇಟೆಯಲ್ಲಿ ತೆಂಗು, ಅಡಿಕೆ ಬೆಳೆಗಾರರು ಹೆಚ್ಚಾಗಿರುವುದರಿಂದ ರೈತರಿಗೆ ಅನುಕೂಲ ಕಲ್ಪಿಸಬೇಕು. ಪಾಂಡವಪುರ ಹಾಗೂ ಶ್ರೀರಂಗಪಟ್ಟಣಕ್ಕೂ ಕಬ್ಬು ಮತ್ತು ಭತ್ತ ಬೆಳೆಗಾರರು ಹೆಚ್ಚು ಇರುವುದರಿಂದ ಸಕ್ಕರೆ ಕಂಪನಿಗೆ ಎಥೆನಾಲ್ ಹಾಗೂ ವಿದ್ಯುತ್ ಉತ್ಪಾದನೆ ಮಾಡಲು ಉತ್ತೇಜಿಸಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜವರೇಗೌಡ, ಕಾರ್ಯದರ್ಶಿ ಎಚ್.ಎಂ.ಕೃಷ್ಣ, ನಾಗರಾಜು ಹನಿಯಂಬಾಡಿ ಇದ್ದರು.