ಉತ್ತಮ ಆರೋಗ್ಯವಂತ ಮಕ್ಕಳು ನಾಡಿನ ಉತ್ತಮ ಯುವಜನರಾಗುತ್ತಾರೆ, ಆರೋಗ್ಯವಂತ ಯುವ ಜನರು ನಮ್ಮ ದೇಶವನ್ನು ಶ್ರೇಷ್ಠ ಮತ್ತು ಶಕ್ತಿವಂತ ರಾಷ್ಟ್ರವಾಗಿ ಮಾಡಬಲ್ಲವಂತರಾಗುತ್ತಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ
ವಾಣಿ ಎ.ಶೆಟ್ಟಿ ತಿಳಿಸಿದರು.
ಮಂಡ್ಯನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಮತೋಲಿತ ಆಹಾರ ಮತ್ತು ಪೌಷ್ಟಿಕಾಂಶ ಕುರಿತು ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ದೇಶದ ಅಮೂಲ್ಯ ಆಸ್ತಿ, ಮಕ್ಕಳ ಪಾಲನೆ ಪೋಷಣೆ ಅವರಿಗೆ ಉತ್ತಮ ಆರೋಗ್ಯ ಕೊಡಿಸುವ ಜವಾಬ್ದಾರಿ ಹಾಗೂ ಹೊಣೆಗಾರಿಕೆ ನಮ್ಮ ಮೇಲಿದೆ. ಮಕ್ಕಳಿಗೆ ಉತ್ತಮ ಆರೋಗ್ಯ ಪೋಷಕಾಂಶ, ಆಹಾರ ಎಲ್ಲವನ್ನು ಕೊಡಿಸುವ, ಕೊಡುವಂತಹ ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯು ಸಹ ನಮ್ಮ ಮೇಲಿದೆ ಎಂದು ಹೇಳಿದರು.
ಮಕ್ಕಳು ಪೋಷಕಾಂಶ ಆಹಾರ ಸಮತೋಲಿತ ಆಹಾರ ತೆಗೆದುಕೊಳ್ಳಬೇಕು.ಇತ್ತೀಚಿನ ದಿನಗಳಲ್ಲಿ ಅಪೌಷ್ಟಿಕತೆ ಕಡಿಮೆಯಾಗಿದೆ. ಅಪೌಷ್ಟಿಕತೆಯಿಂದ ಮಕ್ಕಳ ಸಾವು ಅನಾರೋಗ್ಯದಿಂದ ಬಳಲುತ್ತಿರುವುದನ್ನು ನಾವು ನೋಡಿದ್ದೇವೆ, ಆದ್ದರಿಂದ ಉತ್ತಮ ಸಮಾಜ ನಿರ್ಮಾಣ ಆಗಲು ಮಕ್ಕಳ ಆರೋಗ್ಯದ ಕಡೆ ಗಮನ ಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನೆ ಅಧಿಕಾರಿ ಡಾ.ಸೋಮಶೇಖರ್, ಸಿಡಿಪಿಒ ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಂ.ಆರ್. ಧರಣಿಕುಮಾರ್, ವೇಣುಗೋಪಾಲ್, ಕೋಮಲ್ ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.