ನಾಯಕತ್ವ ಗುಣವುಳ್ಳ ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಕೆ.ಆರ್.ಎಸ್. ಪಕ್ಷವು ಮಹಿಳೆಯರಿಗೆ ವಿಶೇಷ ಆದ್ಯತೆಯನ್ನು ನೀಡುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮೂರನೇ ಒಂದರಷ್ಟು (1/3) ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬೆಂಗಳೂರು ಮಹಾನಗರದ ಕಾರ್ಯದರ್ಶಿ ಜನನಿ ವತ್ಸಲ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ಪಕ್ತವೇ ಚುನಾವಣಾ ವೆಚ್ಚವನ್ನು ಕೂಡ ಭರಿಸಲಿದೆ. ಪ್ರಾಮಾಣಿಕ ರಾಜಕಾರಣವನ್ನು ಮಾಡ ಬಯಸುವ ಅರ್ಹ ಜನಪರ ಕಾಳಜಿಯುಳ್ಳ ಮಹಿಳೆಯರನ್ನು ರಾಜಕೀಯಕ್ಕೆ ಆಹ್ವಾನಿಸಲು ಇಂದಿನಿಂದ ”ಸ್ವಾಭಿಮಾನಿ ಕನ್ನಡದ ಹೆಣ್ಣಿ, ಪವಿತ್ರ ರಾಜಕಾರಣಕ್ಕೆ ಮುಂದಾಗು” ಎನ್ನುವ ರಾಜ್ಯವ್ಯಾಪಿ ಅಭಿಯಾನವನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ಈ ಅಭಿಯಾನದ ಮೊದಲ ಹಂತವು ಐದು ದಿನಗಳ ಕಾಲ ರಾಮನಗರ, ಮಂಡ್ಯ, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ. ಈ ಅಭಿಯಾನದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಗಳು, ಸಾರ್ವಜನಿಕ ಸಭೆಗಳು, ಮಹಿಳಾ ಗುಂಪುಗಳೊಂದಿಗೆ ಸಂವಾದ, ಪಕ್ಷದ ಸದಸ್ಯರೊಂದಿಗೆ ಸಭೆ, ಸದಸ್ಯತ್ವ ನೋಂದಣಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮೊದಲನೇ ಹಂತದ ಈ ಅಭಿಯಾನವು ನನ್ನ ರಾಮನಗರ ಜಿಲ್ಲೆಯಲ್ಲಿ ಆರಂಭವಾಗಿ, ಇಂದು ಮಂಡ್ಯ ಜಿಲ್ಲೆಯಲ್ಲಿ ಸಂಚರಿಸಿ, ನಾಳೆ ಮೈಸೂರು, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಡಿ.16ರವರೆಗೆ ಸಂಚರಿಸಲಿದೆ. ಮುಂದಿನ ದಿನಗಳಲ್ಲಿ ಎರಡು ಮತ್ತು ಮೂರನೇ ಹಂತದ ಅಭಿಯಾನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ಕೆ.ಆರ್.ಎಸ್. ಪಕ್ಷದ ಕೋಲಾರ ಜಿಲ್ಲಾಧ್ಯಕ್ಷೆ ಇಂದಿರಾ ರೆಡ್ಡಿ, ಧಾರವಾಡ ಜಿಲ್ಲಾ ಸಮಿತಿ ಅಧ್ಯಕ್ಷೆ ಸುಮಿತ್ರಾ ಹಳ್ಳಿಕೇರಿ ಹಾಗೂ ಬೆಂ.ಮಹಾನಗರ ಪ್ರಧಾನ ಕಾರ್ಯದರ್ಶಿ ಮಹಾಲಕ್ಷ್ಮಿ ಚನ್ನಕೇಶವ ಉಪಸ್ಥಿತರಿದ್ದರು.