ವರದಿ : ಪ್ರಭು ವಿ.ಎಸ್.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಪಕ್ಷದ ಹೈಕಮಾಂಡ್ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಿದ್ದು ಮೂರು ದಿನಗಳಲ್ಲಿ ಸೂಕ್ತ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆಂದು ಕಾಂಗ್ರೆಸ್ ಮುಖಂಡ ಕದಲೂರು ಉದಯ್ ತಿಳಿಸಿದರು.
ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಅಭಿನಂದಿಸಿ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಯಾಗಬೇಕೆಂಬುದು ಪಕ್ಷದಲ್ಲಿ ಚರ್ಚೆಯಾಗಿದ್ದು ಪಕ್ಷದ ಹೈಕಮಾಂಡ್ ಸೂಕ್ತ ಅಭ್ಯರ್ಥಿಯನ್ನು ಆಯ್ಕೆಗೊಳಿಸಿ ಟಿಕೆಟ್ ಘೋಷಣೆ ಮಾಡಲಿದ್ದು ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.
ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ ಕೇವಲ ಊಹಾಪೋಹ, ಕಲ್ಪನೆಗಳಿದ್ದು ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡುವುದು ಪಕ್ಷದ ಸಿದ್ಧಾಂತವಲ್ಲ ಮಾನದಂಡದ ಆಧಾರದ ಮೇಲೆ ಟಿಕೆಟ್ ಘೋಷಣೆ ಮಾಡಲಿದ್ದು ಈಗಾಗಲೇ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ, ಪಕ್ಷ ಸಂಘಟನೆ ಜತೆಗೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಧೃಡ ನಿರ್ಧಾರವನ್ನು ಕೈಗೊಂಡಿರುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ಭದ್ರ ಕೋಟೆಯಾಗಿರುವ ಜೆಡಿಎಸ್ ಪಕ್ಷವನ್ನು ಮಣಿಸಲು ತಮ್ಮ ಪಕ್ಷ ಸದೃಢವಾಗಿದ್ದು ಪ್ರತಿಯೊಬ್ಬ ಕಾರ್ಯಕರ್ತರನ್ನು ಭೇಟಿ ಮಾಡುವ ಜತೆಗೆ ಇತರೆ ಪಕ್ಷದ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಿದ್ದು ಕೆಲ ಭಿನ್ನಭಿಪ್ರಾಯದಿಂದ ಹೊರಗುಳಿದಿರುವ ಪಕ್ಷದ ಕಾರ್ಯಕರ್ತರು, ಮುಖಂಡರೊಟ್ಟಿಗೆ ಚರ್ಚಿಸಿ ಕರೆತರುವ ಕಾರ್ಯಕ್ಕೆ ಮುಂದಾಗುವುದಾಗಿ ಹೇಳಿದರು.
ಡಿ.ಕೆ.ಶಿ ಭೇಟಿ :
ತಾಲೂಕಿನ ಕದಲೂರು ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಕದಲೂರು ಉದಯ್ ನೂತನವಾಗಿ ನಿರ್ಮಿಸಿರುವ ಮನೆಯ ಗೃಹ ಪ್ರವೇಶದ ಪೂಜಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಶಾಸಕ ಮರಿತಿಬ್ಬೇಗೌಡ ಭೇಟಿ ನೀಡಿದರು.
ಈ ವೇಳೆ ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ನಾಗೇಗೌಡ, ತಾ.ಪಂ. ಮಾಜಿ ಸದಸ್ಯರಾದ ಚಲುವರಾಜು, ಕೆ.ಆರ್. ಮಹೇಶ್, ಮುಖಂಡರಾದ ಅಭಿಷೇಕ್, ಯತೀಶ್, ತಿಮ್ಮೇಗೌಡ, ಶಿವು, ರವಿಕುಮಾರ್ ಇತರರಿದ್ದರು.