ನೆಲ, ಜಲ, ನಾಡು, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿಗೆ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ. ಈಗ ಕನ್ನಡ ನೆಲದ ಮಣ್ಣಿನ ಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯವಾಗಿದೆ ಎಂದಿದ್ದಾರೆ.
ಗುಜರಾತ್ ಮಾಡುವ ಹುನ್ನಾರ
ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್ ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ.
ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು.7/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 1, 2023
“>
ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ ಎಂದು ತಿಳಿಸಿದ್ದಾರೆ.
ಬಿಜೆಪಿ ಭಸ್ಮ
ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಕರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.