2023ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಲು ನನ್ನ ಪಾತ್ರವೂ ಇರಲಿ ಎಂದು ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದೇನೆ ಎಂದು ಮುಖಂಡ ಕೀಲಾರ ರಾಧಾಕೃಷ್ಣ ತಿಳಿಸಿದರು.
ಸೋಮವಾರ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ರಾಧಾಕೃಷ್ಣ, ಸಂಜೆ ಮಂಡ್ಯನಗರದ ಬಂದೀಗೌಡ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ವರಿಷ್ಠರಾದ ಡಿ.ಕೆ.ಶಿವಕುಮಾರ್ ಹಾಗೂ ಚಲುವರಾಯಸ್ವಾಮಿಯವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಕೆಲಸವನ್ನು ನಿರ್ವಂಚನೆಯಿಂದ ಮಾಡುತ್ತೇನೆ. ನನ್ನ ಕುಟುಂಬ 1967 ರಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿ ಕೊಂಡು ಬಂದಿತ್ತು. 2017ರಲ್ಲಿ ನಾನು ಜೆಡಿಎಸ್ ಗೆ ಹೋಗಿ ಅಲ್ಲಿ 4 ವರ್ಷಗಳ ಕಾಲ ಕೆಲಸ ಮಾಡಿದೆ. ಈಗ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಹಿಡಿಯಲು ಅಳಿಲು ಸೇವೆ ಸಲ್ಲಿಸುತ್ತೇನೆ ಎಂದರು.
ಆರು ವರ್ಷಗಳ ಕಾಲ ಜೆಡಿಎಸ್ ಪಕ್ಷದಲ್ಲಿ ಮಾಡಿದ್ದ ಜನಪರ ಕಾರ್ಯಗಳನ್ನು ಕಂಡ ಡಿ.ಕೆ.ಶಿವಕುಮಾರ್ ಅವರು, ನಿಮ್ಮ ಮುಂದಿನ ಭವಿಷ್ಯವನ್ನು ಕಾಂಗ್ರೆಸ್ ಪಕ್ಷ ರೂಪಿಸಲಿದೆ ಎಂದು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ. ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಲು ನಾನು ಸಂಕಲ್ಪ ಮಾಡಿದ್ದೇನೆ ಎಂದರು
ಬಿಜೆಪಿ, ಜೆಡಿಎಸ್ ಪಕ್ಷಗಳು ಕೊಟ್ಟ ಮಾತಿನಂತೆ ಜನರ ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಇವೆರಡೂ ಪಕ್ಷಗಳನ್ನು ಬಗ್ಗು ಬಡಿಯಲು ಎಲ್ಲಾ ಕಾಂಗ್ರೆಸ್ಸಿಗರು ಒಂದಾಗುವಂತೆ ಡಿ.ಕೆ. ಶಿವಕುಮಾರ್ ರವರು ಹೇಳಿದ್ದರು. ಅದರಂತೆ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಲು ನನ್ನ ಪಾತ್ರವೂ ಇರಲಿ ಎಂದು ನಾನು ಕಾಂಗ್ರೆಸ್ ಸೇರಿದ್ದೇನೆ. ಈ ಸಂದರ್ಭದಲ್ಲಿ ನಾನು ಡಿ.ಕೆ. ಶಿವಕುಮಾರ್ ಅವರಿಗೆ ನನ್ನ ಭವಿಷ್ಯವನ್ನು ರೂಪಿಸುವ ಕೆಲಸ ನಿಮಗೆ ಬಿಟ್ಟಿದ್ದು ಎಂದು ತಿಳಿಸಿದ್ದೇನೆ. ಅದಕ್ಕೆ ಅವರು ನಿನ್ನ ಮತ್ತು ನಿನ್ನ ಜೊತೆಯಲ್ಲಿ ಬರುವ ಎಲ್ಲಾ ಮುಖಂಡರಿಗೆ ಭದ್ರವಾದ ನೆಲೆಯನ್ನು ಕಾಂಗ್ರೆಸ್ ಪಕ್ಷದಲ್ಲಿ ಕಲ್ಪಿಸುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಮಂಡ್ಯ ನಗರ ಅಧ್ಯಕ್ಷ ರುದ್ರಪ್ಪ ಅವರು ಮುಖಂಡ ರಾಧಾಕೃಷ್ಣ ಅವರಿಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಪ್ಪಾಜಪ್ಪ, ಅನಿಲ್ ಕುಮಾರ್ ಸೇರಿದಂತೆ ಹಲವರಿದ್ದರು.