ಪ್ರತಿಯೊಬ್ಬರಿಗೂ ಅನ್ನ ನೀಡುವ ರೈತ ಸಂಕಷ್ಟದ ಜೀವನ ಸಾಗಿಸುತ್ತಿದ್ದು, ಎಚ್ಡಿ ಕುಮಾರಸ್ವಾಮಿ ಅವರು ಮುಂದಿನ ಭಾರಿ ಮುಖ್ಯಮಂತ್ರಿಯಾದರೇ ರೈತ ಸಂಕ್ರಾಂತಿ ಆನ್ಲೈನ್ ಸಂವಾದದಲ್ಲಿ ರೈತರು ತಿಳಿಸಿದ ಸಮಸ್ಯೆಗಳನ್ನು ಬಗೆಹರಿಸಿ ರೈತರ ಬಾಳನ್ನು ಹಸನು ಮಾಡಲಿದ್ದಾರೆಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತ ಸಂಕ್ರಾಂತಿ ಎಂಬ ವಿನೂತನ ಸಂವಾದ ಕಾರ್ಯಕ್ರಮದ ಮೂಲಕ ಆನ್ಲೈನ್ ನಲ್ಲಿ ರೈತರ ಸಮಸ್ಯೆಗಳನ್ನು ತಿಳಿದು, ಸಮರ್ಪಕ ಉತ್ತರದ ಜೊತೆಗೆ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡುತ್ತಿದ್ದಾರೆಂದು ಹೇಳಿದರು.
ರೈತರು ಬೆಳೆದ ಬೆಲೆ ವೈಜ್ಞಾನಿಕ ಬೆಲೆ, ಮಧ್ಯವರ್ತಿಗಳ ಹಾವಳಿ, ನೀರಾವರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಸಂವಾದದಲ್ಲಿ ಚರ್ಚೆ ನಡೆಸಿ ಪ್ರಶ್ನೆ ಹಾಗೂ ಉತ್ತರಗಳನ್ನು ವಿನಿಮಯ ಮಾಡಿಕೊಂಡು ರೈತರಿಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿ ಮಾಡಲು ಕುಮಾರಸ್ವಾಮಿ ಅವರು ನಡೆಸುತ್ತಿರುವ ಸಂವಾದ ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದರು.
ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವವೇ ಸರಿ ಎನ್ನುವುದು ರೈತರ ಅಭಿಪ್ರಾಯವಾಗಿದೆ, ಮಳವಳ್ಳಿ ತಾಲ್ಲೂಕು ಕೆಆರ್ಎಸ್ನ ಕೊನೆಯ ಭಾಗವಾಗಿರುವುರಿಂದ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು, ವಿಳ್ಯೆದೆಳೆ ರೈತರ ಸಮಸ್ಯೆಗಳನ್ನು ಸರ್ಕಾರ ಗಮನಹರಿಸಬೇಕು, ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮಳವಳ್ಳಿ ತಾಲ್ಲೂಕಿನ ರೈತರು ಸಂವಾದದಲ್ಲಿ ಮನವಿ ಮಾಡಿಕೊಂಡರು. ಇದಕ್ಕೆ ಉತ್ತರ ನೀಡಿದ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೇ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇನೆಂದು ತಿಳಿಸಿದರು.
ರೈತ ಸಂಕ್ರಾಂತಿ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ನೂರಾರು ರೈತರು ಭಾಗವಹಿಸಿದ್ದರು.