ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹಾ ಕುಂಭಮೇಳದ ಅಂಗವಾಗಿ ಅಕ್ಟೋಬರ್13ರಂದು ಮಧ್ಯಾಹ್ನ 3 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಖ್ಯಾತಿಯ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಜಾನಪದ ಉತ್ಸವ ಅದ್ದೂರಿಯಾಗಿ ನಡೆಯಲಿದೆ.
3 ಸಾವಿರ ಕಲಾವಿದರು ಹಾಗೂ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗೃತಿ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಅಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಮಿನಿವಿಧಾನಸೌಧದ ಆವರಣದಿಂದ ಆರಂಭವಾಗುವ ಮಹದೇಶ್ವರ ಜ್ಯೋತಿ ರಥ ಯಾತ್ರೆಯಲ್ಲಿ 100 ಜಾನಪದ ಕಲಾತಂಡಗಳು, 3 ಸಾವಿರ ಕಲಾವಿದರು, 5 ಸಾವಿರ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
ಕಲಾವಿದರು ವಿವಿಧ ವೇಷಭೂಷಣಗಳನ್ನು ತೊಟ್ಟು ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವೈವಿಧ್ಯಮಯ ಮೆರವಣಿಗೆ ನಡೆಸಿ ಪುರಸಭಾ ಕಾರ್ಯಾಲಯದ ಪಕ್ಕದಲ್ಲಿರುವ ಬೃಹತ್ ಮೈದಾನ ತಲುಪಲಿದ್ದಾರೆ. ಸಂಜೆ 6ಗಂಟೆಯಿಂದ ರಾತ್ರಿ 9ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯಕ್ಷಗಾನ ಪ್ರಸಂಗಗಳ ಪ್ರದರ್ಶನವು ನಡೆಯಲಿದೆ.