ಕುವೈತ್ ಮಂಗಾಫ್ ಸಿಟಿಯಲ್ಲಿನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರತೀಯರು ಸೇರಿ 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಭಾರತೀಯರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಲ್ಲಿ ಕೇರಳದವರು ಹೆಚ್ಚಿನವರು ಎಂದು ಹೇಳಲಾಗಿದೆ.
ಕಟ್ಟಡದಲ್ಲಿ ಬೆಂಕಿ ಅವಘಡವು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಸಂಭವಿಸಿದ್ದು, ಗಾಯಗೊಂಡ 43 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಕುವೈತ್ ಆರೋಗ್ಯ ಇಲಾಖೆ ತಿಳಿಸಿದೆ.
ಘಟನೆ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, “ ಕುವೈತ್ ಸಿಟಿಯಲ್ಲಿ ಬೆಂಕಿಯುಂಟಾಗಿರುವ ಸುದ್ದಿಯಿಂದ ತುಂಬಾ ಆಘಾತವಾಗಿದೆ. ಇಲ್ಲಿಯವರೆಗೂ 40 ಮಂದಿ ಮೃತಪಟ್ಟಿದ್ದು, 50 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಮ್ಮ ರಾಯಭಾರಿ ಘಟನಾ ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.