ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 150ಕ್ಕೂ ಹೆಚ್ಚು ಸ್ಥಾನಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿರುವುದಾಗಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮಿ ನಾರಾಯಣ್ ತಿಳಿಸಿದರು.
ಮದ್ದೂರು ಪಟ್ಟಣದ ಹಳೇ ಒಕ್ಕಲಿಗರ ಬೀದಿಯ ವಿವಿಧೆಡೆ ಬಿಜೆಪಿ ಮುಖಂಡ ಎಸ್.ಪಿ. ಸ್ವಾಮಿ ಅವರ ಪರ ಮತಯಾಚನೆ ನಡೆಸಿ ಬಳಿಕ ಮಾತನಾಡಿದ ಅವರು. ರಾಜ್ಯ ಸೇರಿದಂತೆ ಮಂಡ್ಯ ಜಿಲ್ಲೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ಯುವಕರು, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು ಸರಕಾರ ಕೈಗೊಂಡ ಹಲವಾರು ಯೋಜನೆಗಳಿಂದಾಗಿ ಮತದಾರರು ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತರಲು ಸ್ವಯಂ ಪ್ರೇರಿತವಾಗಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆಂದರು.
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರು ಮದ್ದೂರು ತಾಲೂಕಿನಾದ್ಯಂತ ಪಕ್ಷ ಸಂಘಟಿಸಿ ಬಲವರ್ಧನೆಗೆ ಶ್ರಮಿಸುತ್ತಿದ್ದು ಇತರೆ ಪಕ್ಷದ ಕಾರ್ಯಕರ್ತರು ಬಿಜೆಪಿಯತ್ತ ಮುಖಮಾಡಿರುವುದರಿಂದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದ್ದು ಈಗಾಗಲೇ ಪ್ರತಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸುತ್ತಿದ್ದಾರೆಂದರು.
ಪಟ್ಟಣದ ಸಿದ್ಧಾರ್ಥನಗರ, ಲೀಲಾವತಿ ಬಡಾವಣೆ, ವಿವೇಕಾನಂದ ನಗರ, ಸೋಮೇಗೌಡರ ಬೀದಿ, ಹಳೇಒಕ್ಕಲಿಗರ ಬೀದಿ ಇನ್ನಿತರೆ ಬಡಾವಣೆಗಳಲ್ಲಿ ಜಿ.ಪಂ. ಮಾಜಿ ಅಧ್ಯಕ್ಷೆ ನಾಗರತ್ನಸ್ವಾಮಿ ತಮ್ಮ ಪತಿ ಪರ ಬೆಳಿಗ್ಗಿನಿಂದಲೂ ಅಪಾರ ಸಂಖ್ಯೆಯ ಕಾರ್ಯಕರ್ತರ ಜತೆಗೂಡಿ ಬಿರುಸಿನ ಮತಯಾಚನೆ ನಡೆಸಿದರು.
ಈ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಪಿ. ಮಹದೇವು, ಪುರಸಭೆ ಸದಸ್ಯರಾದ ತ್ರಿವೇಣಿ, ಧನಂಜಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಸಿ. ಮಹೇಂದ್ರ, ನಗರಘಟಕದ ಅಧ್ಯಕ್ಷ ಮಧುಕುಮಾರ್, ಮುಖಂಡರಾದ ಅಭಿಷೇಕ್, ಶ್ರೇಯಸ್, ಶ್ವೇತ, ಮಮತಾರಾಂಕ, ರವಿಕುಮಾರ್, ಮಹೇಶ್, ನಾಗಣ್ಣ ಇತರರಿದ್ದರು.