ಮಳವಳ್ಳಿ ಪಟ್ಟಣದಲ್ಲಿ ಕೊಲ್ಕತ್ತಾದಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಮೇಲೆ ಬರ್ಬರ ಹತ್ಯೆ ಮಾಡಿರುವ ಅಮಾನುಷ ಕೃತ್ಯವನ್ನು ಖಂಡಿಸಿ ಮಳವಳ್ಳಿ ತಾಲೂಕಿನ ವಕೀಲರ ಸಂಘವು ಶುಕ್ರವಾರ ಪ್ರತಿಭಟನೆ ನಡೆಸಿತು.
ಮಳವಳ್ಳಿ ಪಟ್ಟಣದ ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಕೀಲರು ಇಂದಿನ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ಆವರಣ ದಿಂದ ಹೊರಟ ವಕೀಲರು, ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಡಿ.ಎಂ ಸುಂದರ್, ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾ ಚಾರ ನಡೆಸಿರುವ ದುಷ್ಕರ್ಮಿಗಳು, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವುದು ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವ ಸಂಗತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶಿಕ್ಷಣ ಸಂಸ್ಥೆಗಳಲ್ಲೇ ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎಂದ ಮೇಲೆ ಸಾಮಾನ್ಯ ಮಹಿಳೆಯರ ಗತಿ ಏನು ? ಎಂದು ಆತಂಕ ವ್ಯಕ್ತಪಡಿಸಿದರು. ಆರ್.ಜಿ.ಕರ್ ಕಾಲೇಜಿನ ಮುಖ್ಯಸ್ಥರನ್ನು ಸೇವೆಯಿಂದ ವಜಾಗೊಳಿಸಿ ಅವರನ್ನು ಕೂಡಲೇ ಬಂಧಿಸಿ ಕೃತ್ಯವೆಸಗಿದ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ನಟೇಶ್, ವಕೀಲರಾದ ಮಲ್ಲಪ್ಪ, ಹರ್ಷವರ್ಧನ, ರಾಜು. ಜಗದೀಶ್, ಮುತ್ತುರಾಜ್, ಹೇಮಂತ್, ರಾಣಿ, ನಾಗರತ್ನ, ಮೈತ್ರಿ, ರೂಪ ಮತ್ತಿತರರು ಪಾಲ್ಗೊಂಡಿದ್ದರು.