ಧರ್ಮ ಧರ್ಮಗಳ ಜನರ ನಡುವೆ ಬೆಂಕಿ ಹಚ್ಚಿ ಸೌಹಾರ್ದತೆಯನ್ನು ಕೆಡವಲು ಕುತಂತ ನಡೆಸುತ್ತಿರುವ ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ಸಾಮರಸ್ಯ, ಸಹಬಾಳ್ವೆಯನ್ನು ಗಟ್ಟಿಗೊಳಿಸಲು ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಸಮಾನ ಮನಸ್ಕರ ವೇದಿಕೆಯ ಮುಖಂಡ, ವಕೀಲ ಲಕ್ಷ್ಮಣ್ ಚೀರನಹಳ್ಳಿ ತಿಳಿಸಿದರು.
ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ವತಿಯಿಂದ ಭಾನುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಶಾಂತಿ, ಸಹಬಾಳ್ವೆ, ಸಾಮರಸ್ಯ ಮೂಡಿಸಿ ಸಮಾಜವನ್ನು ಕಟ್ಟುವುದು ನಮ್ಮ ಉದ್ಧೇಶವಾಗಿದೆ. ನಾವು ಕಟ್ಟುವ ಕೆಲಸ ಮಾಡುತ್ತಿದ್ದರೆ, ಮತ್ತೆ ಕೆಲವರು ಸೌಹಾರ್ದತೆಯನ್ನು ಕೆಡವುವ ಕೆಲಸದಲ್ಲಿ ನಿರತರಾಗಿದ್ದಾರೆ, ಇದರ ವಿರುದ್ಧ ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲೂ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದರು.
ಬಿಜೆಪಿ-ಆರೆಸ್ಸೆಸ್ ಸಂಘಟನೆಗಳು ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಸುಳ್ಳುಗಳನ್ನು ಭಿತ್ತಿ, ಅವರನ್ನು ತೇಜೋವದೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸುಳ್ಳುಗಳನ್ನು ಹಿಮ್ಮೆಟ್ಟಿಸಿ ಸೌಹಾರ್ದತೆಯನ್ನು ಜನರ ಮನಸ್ಸಿನಲ್ಲಿ ಬಿತ್ತುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.