ಮಂಡ್ಯ ಜಿಲ್ಲೆಯಲ್ಲಿ ತಂಬಾಕು ಸೇವನೆ ಮಾಡುವುದು ಅಪಾಯಕಾರಿ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶಾಲಾ ಮಕ್ಕಳ ಮೂಲಕ ಪತ್ರ ಅಭಿಯಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಂಬಾಕು ಸೇವನೆ ಮಾಡುವವರ ಮನಪರಿವರ್ತನೆಯಾಗಬೇಕು. ಇದಕ್ಕಾಗಿ ಮಕ್ಕಳ ಮೂಲಕ ಅವರ ಕುಟುಂಬದಲ್ಲಿ ತಂಬಾಕು ಸೇವನೆ ಮಾಡುವವರಿಗೆ ಪತ್ರ ಬರೆಯಿಸಿ ಎಂದರು.
ಪರವಾನಗಿ ರದ್ದುಗೊಳಿಸಿ
ನಿಯಮಬಾಹಿರವಾಗಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿದಾಗ ಕೇವಲ ದಂಡ ವಿಧಿಸುವುದರಿಂದ ಪ್ರಯೋಜನವಾಗುವುದಿಲ್ಲ. ಸ್ಥಳೀಯ ಸಂಸ್ಥೆ ಅವರು ಅಂಗಡಿಗಳ ಪರವಾನಗಿ ರದ್ದುಪಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಅಂಗಡಿಗಳಲ್ಲಿ ಹೆಚ್ಚಿನ ಕೋಟ್ಪಾ ಕಾಯ್ದೆ ಉಲ್ಲಂಘನೆಗಳು ನಡೆಯುತ್ತದೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದರು.
ತಂಬಾಕು ಸೇವನೆಯಿಂದ ಜನರು ಹಲವಾರು ಖಾಯಿಲೆಗಳಿಗೆ ಒಳಗಾಗಿ ಮೃತಪಡುತ್ತಾರೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ. ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿ. ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ಸ್ ಮೂಲಕ ತಿಳಿಸಿ ಎಂದರು.
ಕೃಷಿ ಬೆಳೆಗಳ ನಡುವೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲು ಚಿಂತನೆ ನಡೆಸಿ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ: ಮೋಹನ್ ಅವರು ಮಾತನಾಡಿ ಜಿಲ್ಲೆಯಲ್ಲಿ 45 ದಾಳಿ ನಡೆಸಿ ಕೋಟ್ಪ್ ಕಾಯ್ದೆಯಡಿ 609 ದೂರುಗಳನ್ಜು ದಾಖಲು ಮಾಡಿ ರೂ 85,760/- ದಂಡ ವಸೂಲಿ ಮಾಡಲಾಗಿದೆ ಎಂದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಅನಿಲ್ ಕುಮಾರ್, ಡಾ.ಕುಮಾರ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ವಾರ್ತಾಧಿಕಾರಿ ನಿರ್ಮಲ, ಜಿಲ್ಲಾ ಸಂಯೋಜಕ ತಿಮ್ಮರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.