ಕಳೆದೊಂದು ವಾರದಿಂದ ನೀರಿಗಾಗಿ ಪರಿತಪಿಸುತ್ತಿದ್ದರೂ ಯಾವುದೇ ಕ್ರಮ ಕ್ಕೆಗೊಳ್ಳದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮಂಡ್ಯ ತಾಲೂಕಿನ ಮಾಯಣ್ಣನಕೊಪ್ಪಲು ಗ್ರಾಮಸ್ಥರು ಯಲಿಯೂರು ಗ್ರಾಪಂ ಕಚೇರಿಗೆ ಬೀಗ ಜಡಿದು ಮಂಗಳವಾರ ಪ್ರತಿಭಟನೆ ನಡೆಸಿದರು.
ಗ್ರಾಪಂ ಕಚೇರಿ ಮುಂಭಾಗ ಜಮಾವಣೆಗೊಂಡ ಗ್ರಾಮಸ್ಥರು, ಗ್ರಾಪಂ ಪಿಡಿಒ ಹೊಂಬಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ, ಪಿಡಿಒ ಗೈರು ಹಾಜರಾಗಿದ್ದ ಕಾರಣ ಇತರೆ ಸಿಬ್ಬಂದಿಯನ್ನು ಕಚೇರಿಯಲ್ಲೆ ಉಳಿಸಿ ಗೇಟಿಗೆ ಬೀಗ ಜಡಿದು ಪ್ರತಿಭಟನೆ ಮುಂದುವರೆಸಿದರು.
ಕಳೆದ ಮೂರು ತಿಂಗಳಿಂದಲೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹಲವಾರು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಪಿಡಿಒ ಅವರನ್ನು ಪ್ರಶ್ನಿಸಿದರೆ, ತಾನು ಕೆಲಸಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ರವಿ ಪಟೇಲ್ ಕಿಡಿಕಾರಿದರು.
ಕೂಡಲೇ ಗ್ರಾಮಕ್ಕೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನಿರ್ಲಕ್ಷ್ಯ ವಹಿಸಿರುವ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಮುಖಂಡರಾದ ಎಂ.ಕೆ.ಆನಂದ, ಎಂ.ಕೆ.ಚಂದ್ರು, ಎಂ.ಕೆ.ದೇವೇಗೌಡ ಸೇರಿದಂತೆ ಹಲವಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.