ಜಿಲ್ಲೆಯಲ್ಲಿ ಶಾಂತಿ,ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಸೋಲು- ಗೆಲುವಿಗಿಂತ ಸ್ಪರ್ಧಾ ಮನೋಭಾವ ಬಹಳ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ. ಎಚ್. ಎನ್. ಗೋಪಾಲಕೃಷ್ಣ ತಿಳಿಸಿದರು
ಮಂಡ್ಯ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಅವರು ಮಾತನಾಡಿದರು.
ಪೋಲಿಸ್ ಸಿಬ್ಬಂದಿಗಳು ಬಹಳ ಒತ್ತಡದಲ್ಲಿ ತಮ್ಮ ವೃತ್ತಿ ಜೀವನದ 24ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಾರೆ. ಸಮಾವೇಶಗಳು, ಮುಷ್ಕರ, ಕೋವಿಡ್ ಸಂದರ್ಭದಲ್ಲಿ ತಮ್ಮ ಕುಟುಂಬದ ಜೊತೆ ಕಾಲ ಕಳೆಯುವುದನ್ನು ಬಿಟ್ಟು ಕೆಲಸದಲ್ಲಿ ತೊಡಗಿಕೊಂಡಿದ್ದರು. ಪೊಲೀಸರು ಮನೆಯ ಹೊರಗೆ ಕರ್ತವ್ಯ ಮಾಡುವುದರಿಂದಲೇ ನಾವೆಲ್ಲ ಮನೆಯ ಒಳಗಡೆ ನೆಮ್ಮದಿಯಾಗಿರಲು ಸಾಧ್ಯವಾಗಿದೆ ಎಂದರು.
ಪೊಲೀಸರು ತಮ್ಮ ವೃತ್ತಿ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸರ್ಕಾರದ ಪ್ರಮುಖ ಅಂಗವಾಗಿರುವ ಪೊಲೀಸ್ ಇಲಾಖೆ ಪ್ರತಿ ವರ್ಷ ವಾರ್ಷಿಕ ಕ್ರೀಡಾಕೂಟ ಆಯೋಜಿಸುತ್ತಿರುವುದು ಸಂತೋಷದ ಸಂಗತಿ. ಪೊಲೀಸ್ ಸಿಬ್ಬಂದಿಗಳು ಮೂರು ದಿನಗಳ ಕಾಲ ಸ್ಪರ್ಧಾ ಮನೋಭಾವದಿಂದ, ಸೋಲು- ಗೆಲುವು ಏನೇ ಇರಲಿ, ಸಂತೋಷದಿಂದ ಭಾಗವಹಿಸಬೇಕೆಂದು ಕರೆ ನೀಡಿದರು.
ಪೋಲಿಸ್ ಸಿಬ್ಬಂದಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ರಮಾ ಕ್ರೀಡಾಕೂಟ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ವೇಣುಗೋಪಾಲ್ ಮತ್ತಿತರರಿದ್ದರು.