ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಗಳಾಗಿ ಮಂಡ್ಯ ಹಾಗೂ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿರುವ ಮಧುಚಂದನ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ತಮ್ಮ ಬೆಂಬಲ ನೀಡುವುದಾಗಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ಟಿ.ಲಲಿತಾ ನಾಯಕ್ ಘೋಷಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸುವ ಉದ್ಧೇಶದಿಂದ ರಾಜ್ಯದಾದ್ಯಂತ ಜನತಾ ಪಾರ್ಟಿಯು ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಹೇಳಿದರು.
ಬಿಜೆಪಿಯು ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿದ್ದು, ರೈತರು, ಮಹಿಳೆಯರು ಹಾಗೂ ಯುವಜನರನ್ನು ಕಡೆಗಣಿಸುತ್ತಿದೆ. ಅಲ್ಲದೇ ಸರ್ಕಾರದ ಎಲ್ಲಾ ಉದ್ದಿಮೆಗಳನ್ನು ಖಾಸಗೀಕರಣ ಮಾಡಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ದೂರಿದರು.
ಬೆಂಬಲದ ಬಗ್ಗೆ ಸುಮಲತಾ ಅವರನ್ನೇ ಕೇಳಿ
ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ನಿಮಗೆ ಬೆಂಬಲ ನೀಡಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆ ಪ್ರತಿಕ್ರಿಯಿಸಿದ ದರ್ಶನ್ ಪುಟ್ಟಣ್ಣಯ್ಯ, ಈ ಬಗ್ಗೆ ನೀವು ಸುಮಲತಾ ಅವರನ್ನೇ ಕೇಳಿ ಎಂದು ಉತ್ತರಿಸಿದರು.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರ ಜೊತೆ ಮಾತುಕತೆ ನಡೆಸಿರುವುದು ಸತ್ಯ. ಆದರೆ ಅವರು ಮೇಲುಕೋಟೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಹಾಕುತ್ತಾರೋ ಇಲ್ಲವೋ ಎಂಬುದನ್ನು ಇನ್ನಷ್ಟೆ ನಿರ್ಧರಿಸಬೇಕಾಗಿದೆ ಎಂದರು.
ಗೋಷ್ಠಿಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಸರ್ವೋದಯ ಕರ್ನಾಟಕ ಪಕ್ಷದ ಮಂಡ್ಯ ಕ್ಷೇತ್ರ ಅಭ್ಯರ್ಥಿ ಮಧುಚಂದನ್, ಮುಖಂಡರಾದ ಪ್ರಸನ್ನ ಎನ್.ಗೌಡ ಮತ್ತಿತರರಿದ್ದರು.