ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಶಾಸಕಿ ಮಲ್ಲಾಜಮ್ಮ ಹಾಗೂ ಡಾ. ಮೂರ್ತಿ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಪ್ರಬಲ ನಾಯಕರಾಗಿ ಜೋಡೆತ್ತುಗಳಂತೆ ದುಡಿಯುತ್ತಿರುವ ಚಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ಕ್ಷೇತ್ರಗಳಲ್ಲಿ ಸೋತು ಮಂಕಾಗಿದ್ದ ಕಾಂಗ್ರೆಸ್ ಪಕ್ಷವನ್ನು ನಂತರದ ಹಲವು ಚುನಾವಣೆಗಳಲ್ಲಿ ಮೇಲೆತ್ತಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ತುಂಬಿದ್ದಾರೆ.
ಕಳೆದ ಎರಡು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ದಿನೇಶ್ ಗೂಳಿಗೌಡ ಹಾಗೂ ಮಧು ಜಿ.ಮಾದೇಗೌಡ ಅವರು ಆಯ್ಕೆಯಾಗಲು ಜಿಲ್ಲೆಯಲ್ಲಿ ಈ ಜೋಡೆತ್ತುಗಳ ಶ್ರಮ ಸಾಕಷ್ಟಿದೆ. ಮೀಸಲು ಕ್ಷೇತ್ರವಾದ ಮಳವಳ್ಳಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿ ಕಾರ್ಯನಿರ್ವಹಿಸಿರುವ ಪಿ.ಎಂ. ನರೇಂದ್ರಸ್ವಾಮಿ ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ತಮ್ಮ ಎರಡು ಅವಧಿಯಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯ ದಟ್ಟವಾಗಿದೆ.
ಮಾಜಿ ಶಾಸಕಿ ಮಲ್ಲಾಜಮ್ಮ ಕೂಡ ಹಲವು ಚುನಾವಣೆಗಳ ನಂತರ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮತ್ತೋರ್ವ ಕಾಂಗ್ರೆಸ್ ಮುಖಂಡ ಡಾ.ಮೂರ್ತಿ ನನಗೊಂದು ಬಾರಿ ಅವಕಾಶ ನೀಡುವಂತೆ ಕೋರಿ ಟಿಕೆಟ್ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಹಿಡಿತ ಹೊಂದಿದ್ದಾರೆ.ಜನರೊಂದಿಗೆ ಹಲವಾರು ವರ್ಷಗಳಿಂದ ಹೊಂದಿರುವ ಒಡನಾಟ,ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇವರನ್ನೇ ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಿದೆ ಎಂಬುದು ಬೆಂಬಲಿಗರ ಮಾತು.