ಮಂಡ್ಯ ನಗರದ ಅರ್ಕೇಶ್ವರ ಬಡಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ.ಎಚ್ ಕೃಷ್ಣ ನೇತೃತ್ವದಲ್ಲಿ ಶ್ರೀಮಲೆ ಮಹದೇಶ್ವರ ಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಬಳಿಕ ಮಾತನಾಡಿದ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ.ಕೃಷ್ಣ ಅವರು, ಗ್ರಾಮೀಣ ಪ್ರದೇಶದ ಬಡ ಜನತೆ ಪುರಾಣ ಪ್ರಸಿದ್ಧ ಧಾರ್ಮಿಕ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ದರ್ಶನ ಮಾಡಿರುವುದಿಲ್ಲ. ಅಂತಹ ಜನರ ಅನುಕೂಲಕ್ಕಾಗಿ ಉಚಿತವಾಗಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಶ್ರೀ ಮಲೆ ಮಹದೇಶ್ವರ ಯಾತ್ರೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಇಂದು 2ನೇ ಅಭಿಯಾನದಲ್ಲಿ ಮಂಡ್ಯ ತಾಲೂಕಿನ ಹುಲಿವಾನ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳ ಜನರು ಯಾತ್ರೆ ಹೊರಟರು. ನಾಲ್ಕು ಸಾರಿಗೆ ಬಸ್ಸುಗಳ ಮೂಲಕ ಸುಮಾರು 200 ಕ್ಕೂ ಹೆಚ್ಚು ಜನರು ಎಲ್ಲಾ ಸೌಲಭ್ಯಗಳೊಂದಿಗೆ ಇಷ್ಟಾರ್ಥಗಳ ಸಿದ್ಧಿಗಾಗಿ ಮತ್ತು ಪುಣ್ಯಕ್ಷೇತ್ರದ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ
2023ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೇನೆ, ಹೈಕಮಾಂಡ್ ನನ್ನ ಮೇಲೆ ಕೃಪೆ ತೋರಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಡುವ ಭರವಸೆ ಇದೆ. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರದ ಮುಖಂಡರು ಮತ್ತು ಜನರು ಕೂಡ ಒತ್ತಾಯ ಮಾಡುತ್ತಿದ್ದಾರೆ, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುವುದರಿಂದ ಕಾಂಗ್ರೆಸ್ ಟಿಕೆಟ್ ಲಭಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹುಲಿವಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯಲತಾ, ಗ್ರಾ.ಪಂ.ಸದಸ್ಯರಾದ ರವಿಕುಮಾರ್, ವೈರಮುಡಿ, ಸ್ಥಳೀಯ ಮುಖಂಡರಾದ ಯೋಗೇಶ್, ಎಚ್ ಎಸ್ ರಮೇಶ್, ಶಂಕರ್, ಶ್ರೀನಿವಾಸ್ , ಎಚ್ ಡಿ ರವಿಶಂಕರ್, ವೇಣುಗೋಪಾಲ್ ಹಲವರಿದ್ದರು.