”ನಾವು ಘೋಷಣೆ ಮಾಡಿರುವ 5 ಗ್ಯಾರಂಟಿ ಕಾರ್ಯಕ್ರಮಗಳು ನೂರಕ್ಕೆ ನೂರು ಜಾರಿಯಾಗುತ್ತವೆ ಎಂಬ ಭರವಸೆ ನೀಡುತ್ತೇನೆ. ಸುಳ್ಳು ಹೇಳುವುದು, ಬಾಯಿ ಮಾತಿನ ಭರವಸೆ ನೀಡುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಬಿಟ್ಟಿದೆ. ನಾವು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿ ಬಡವರ, ಕೃಷಿಕರ, ಹಿಂದುಳಿದವರ, ಎಲ್ಲ ವರ್ಗ ಸಮುದಾಯಗಳ ಪರ ಉತ್ತಮ ಕಾರ್ಯಕ್ರಮಗಳನ್ನು ನೀಡಿ ಅನುಷ್ಠಾನಕ್ಕೆ ತರುತ್ತೇವೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಶನಿವಾರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿಯನ್ನುದ್ದೇಶಿಸಿ ಮಾತನಾಡಿ ಅವರು, ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಎರಡೂ ಎಂಜಿನ್ಗಳು ಯಾವತ್ತೋ ಕೆಟ್ಟು ನಿಂತಿವೆ. ನಿಮ್ಮ ಜೇಬಿನಿಂದ ಲೂಟಿ ಮಾಡಿ, ತಮ್ಮ ಜೇಬು ತುಂಬಿಸಿಕೊಳ್ಳುವ ಏಕೈಕ ಉದ್ದೇಶದಿಂದ ಭ್ರಷ್ಟ ಬಿಜೆಪಿ ‘ಆಪರೇಷನ್ ಕಮಲ’ದ ಸಂಚು ರೂಪಿಸಿ ಅಧಿಕಾರಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಗೃಹ ಜ್ಯೋತಿ – 200 ಯೂನಿಟ್ ಉಚಿತ ವಿದ್ಯುತ್, ಗೃಹ ಲಕ್ಷ್ಮಿ – ಮನೆಯೊಡತಿಗೆ ತಿಂಗಳಿಗೆ ₹2000, ಯುವ ನಿಧಿ – ಪದವೀಧರರಿಗೆ ಮಾಸಿಕ ₹3,000, ಅನ್ನ ಭಾಗ್ಯ – ಬಿಪಿಎಲ್ದಾರರಿಗೆ ತಲಾ 10 ಕೆಜಿ ಅಕ್ಕಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಶತಸಿದ್ಧ ಇದರಲ್ಲಿ ಅನುಮಾನವೇ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಸಚಿವ ಬಿ.ಸೋಮಶೇಖರ್ ಉಪಸ್ಥಿತರಿದ್ದರು.