ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೂ ಮಾರಾಟವಾಗಿಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವಿಶ್ವಾಸ ವ್ಯಕ್ತಪಡಿಸಿದರು.
ರಂಜಾನ್ ಹಬ್ಬದ ಅಂಗವಾಗಿ ನಗರದ ಶಂಕರಮಠದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷದ ವಿರುದ್ಧವಾಗಿ ಕೆಲವರು ಈ ರೀತಿ ಅಪಪ್ರಚಾರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯ ಟಿಕೆಟ್ ಹಣಕ್ಕಾಗಿ ಯಾರಿಗೂ ಮಾರಾಟವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ನಲ್ಲಿ ಯಾವುದೇ ಬಂಡಾಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ವರಿಷ್ಠರು ಮನವೊಲಿಸಿ ಬಂಡಾಯವೆದ್ದಿರುವ ಅಭ್ಯರ್ಥಿಗಳ ನಾಮಪತ್ರವನ್ನು ವಾಪಸ್ ತೆಗೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಂದು ಮನೆ ಅಂದ ಮೇಲೆ ಅಣ್ಣ-ತಮ್ಮಂದಿರಿಗೆ ಸಣ್ಣ-ಪುಟ್ಟ ಮನಸ್ತಾಪಗಳು ಬರುವುದು ಸಾಮಾನ್ಯ, ಅದೇ ರೀತಿ ಟಿಕೆಟ್ ವಂಚಿತ ಅಭ್ಯರ್ಥಿಗಳು ಬೇಸರಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ವರಿಷ್ಠರು ಎಲ್ಲವನ್ನೂ ಶಮನ ಮಾಡಲಿದ್ದಾರೆ ಕಾದು ನೋಡಿ ಎಂದರು.
ಜೆಡಿಎಸ್ನಿಂದ ಬಂಡಾಯವಾಗಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿರುವವರ ಜೊತೆ ಮಾತನಾಡಿ ಇನ್ನೆರಡ್ಮೂರು ದಿನಗಳಲ್ಲಿ ಎಲ್ಲವನ್ನೂ ಸರಿ ಪಡಿಸುವುದಾಗಿ ಸ್ಪಷ್ಟನೆ ನೀಡಿದರು.
ಶಾಸಕ ಎಂ.ಶ್ರೀನಿವಾಸ್ ನನಗೂ ಸಹ ತುಂಬಾ ಆತ್ಮೀಯರು, ನಾನೂ ಸಹ ಅವರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇನ್ನು ಸಮಯವಕಾಶ ಇರುವುದರಿಂದ ವರಿಷ್ಠರು ಎಲ್ಲವನ್ನೂ ಸರಿಪಡಿಸಲಿದ್ದಾರೆ. ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ ಎಂದರು.
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಖಚಿತ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.