ಬೆಂಗಳೂರು ಪೊಲೀಸರು ನನ್ನನ್ನು ಬಂಧಿಸಿದ್ದಾರೆ ಎಂಬುದು ಸಂಪೂರ್ಣ ಸುಳ್ಳು ಎಂದು ಶಾಸಕ ಗಣಿಗ ರವಿಕುಮಾರ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ಅವರ ದರ್ಶನ ಪಡೆಯಲು ನಾನು ಬಿಜಿಎಸ್ ಆಸ್ಪತ್ರೆಗೆ ತೆರಳಿದ್ದೆ. ಆ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಕೂಡ ಬಂದಿದ್ದರು.ಈ ಸಂದರ್ಭದಲ್ಲಿ ಅಲ್ಲಿಗೆ ನೈಸ್ ಸಂಸ್ಥೆಯ ಅಶೋಕ್ ಖೇಣಿ ಕೂಡ ಬಂದಿದ್ದರು.ಆಗ ಎಚ್.ಡಿ. ದೇವೇಗೌಡರನ್ನು ಅಶೋಕ್ ಖೇಣಿಯವರು ನಿಂದಿಸಿದ್ದಾರೆ ಎಂಬುದನ್ನು ಕೆಲವರು ಪ್ರಶ್ನಿಸಿದ ಸಂದರ್ಭದಲ್ಲಿ ಘರ್ಷಣೆ ಉಂಟಾಯಿತು.
ಈ ಹಿನ್ನಲೆಯಲ್ಲಿ ಅಶೋಕ್ ಖೇಣಿ ಅವರು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ನನ್ನನ್ನು ಸೇರಿದಂತೆ ಎಚ್.ಡಿ.ದೇವೇಗೌಡ, ಅರುಣ್ ಗೌಡ, ಕೆಪಿಎಸ್ಸಿ ಮಾಜಿ ಅಧ್ಯಕ್ಷ ಎಚ್.ಎನ್. ಕೃಷ್ಣ, ಈ ಸಂಜೆ ಸಂಪಾದಕ ವೆಂಕಟೇಶ್,ರಾಜ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಅವರ ಮೇಲೆ ದೂರು ನೀಡಿದ್ದರು.
ನಾನು ಶಾಸಕನಾದ ನಂತರ ಈ ಮೊಕದ್ದಮೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮೊಕದ್ದಮೆಯ ವಿಚಾರವಾಗಿ ನಾನು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದೆ.ಈ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ನನ್ನನ್ನು ಬಂಧಿಸಿದ್ದಾರೆ ಎಂದು ಕೆಲವೊಂದು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರವಾಗಿದೆ.
ಇದೊಂದು ಸಂಪೂರ್ಣ ಸುಳ್ಳು ಸುದ್ದಿ. ನನ್ನ ಬಂಧನವಾಗಿಲ್ಲ ಎಂದು ಸ್ಪಷ್ಟಪಡಿಸಿದರು.