ಮಂಡ್ಯ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಇಂದು ಮಂಡ್ಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಪರಿಶೀಲನೆ ನಡೆಸಿದರು.
ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು, ಕೋಸ್೯ಗಳು, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ ಹಾಗೂ ಲಿಪಿಕ ವರ್ಗದ ಸಿಬ್ಬಂದಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕುಲಪತಿ ಡಾ ಪುಟ್ಟರಾಜು ಮಾತನಾಡಿ, ವಿಶ್ವವಿದ್ಯಾಲಯದ ಕೌನ್ಸಿಲ್ ಸದಸ್ಯರ ನೇಮಕದ ಬಗ್ಗೆ ಸಚಿವರಿಗೆ ವಿವರಿಸಿದರು.
ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ 47 ಕಾಲೇಜುಗಳು ಬರಲಿದ್ದು, ಒಟ್ಟು 20,748 ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಎಂ.ಬಿ.ಎ, ಎಂ.ಸಿ.ಎ ಸೇರಿದಂತೆ ಇನ್ನಿತರ ಕೋಸ್೯ಗಳನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್, ಎ.ಬಿ ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಸಿಇಓ ಶೇಕ್ ತನ್ವೀರ್ ಆಸಿಫ್, ಸಿಂಡಿಕೇಟ್ ಸದಸ್ಯರಾದ ಶರಣಬಸಪ್ಪ ಯತ್ನಳ್ಳಿ ಮತ್ತು ನಾಗರಾಜು ಮತ್ತು ಮಂಡ್ಯ ವಿಶ್ವ ವಿದ್ಯಾಲಯದ ಕುಲ ಸಚಿವ ಡಾ.ರಂಗರಾಜು ಎಚ್.ಜಿ ಉಪಸ್ಥಿತರಿದ್ದರು.