ರೈತರು ಹಾಗೂ ಕೃಷಿಕ ಸಮಾಜದ ಏಳಿಗೆಗಾಗಿ ಈಗ ನೀಡಿರುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನನ್ನ ಮೇಲೆ ಸಚಿವ ಚಲುವರಾಯಸ್ವಾಮಿ ಹಾಗೂ ಜನತೆ ಇಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಎಸ್ ಆರ್ ಮಂಜುನಾಥ್ ಗೌಡ ತಿಳಿಸಿದರು.
ಮಂಡ್ಯ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವ ಕೃಷಿಕನಾದ ನನ್ನನ್ನು ಗುರುತಿಸಿ ರಾಜ್ಯದ ಕೃಷಿಕ ಸಮಾಜದ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಟ್ಟ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ತಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರೊಂದಿಗೆ ಗುರುತಿಸಿಕೊಂಡಿದ್ದು, ಬದಲಾದ ರಾಜಕಾರಣದಲ್ಲಿ ಕಳೆದ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆದ ನಂತರ ನಾನು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಮರಿತಿಬ್ಬೇಗೌಡರ ಜೊತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದೇವೆ ಎಂದು ತಿಳಿಸಿದರು.
ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲ ತಾಲೂಕಿನ ರೈತಾಪಿ ಕುಟುಂಬದಿಂದ ಬಂದ ಯುವ ಕೃಷಿಕನಾದ ನನ್ನನ್ನು ಗುರುತಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾಗಮಂಗಲದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ಚಲುವರಾಯಸ್ವಾಮಿ ಅವರು ಹೆಸರುಗಳಿಸಿದ್ದಾರೆ.ಅವರು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಾಪುಗಾಲು ಇಟ್ಟಿದ್ದಾರೆ .ಹಾಗಾಗಿ ಅವರಿಗೆ ಶಕ್ತಿ ತುಂಬುವ ಕೆಲಸ ಆಗಬೇಕಿದೆ ಎಂದರು .
ಗೋಷ್ಠಿಯಲ್ಲಿ ಕೆಆರ್ ಪೇಟೆ ಈಶ್ವರ್ ,ನಾಗರಾಜ್, ವೆಂಕಟೇಶ್ ಸೇರಿದಂತೆ ಇತರರಿದ್ದರು.