ಕಳೆದ ಒಂದು ವರ್ಷದಿಂದ ರಾಜ್ಯದಾದ್ಯಂತ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಪಡಿಸಲು ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟದ ಫಲವಾಗಿ, ಸಾರ್ವಜನಿಕ ಶಿಕ್ಷಣ ಬಲಪಡಿಸುವಲ್ಲಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಹಲವು ಘೋಷಣೆಗಳನ್ನು ನೀಡಿರುವುದು ಸ್ವಾಗತಾರ್ಹ. ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ AIDSO ಜಿಲ್ಲಾ ಸಂಚಾಲಕಿ ಚಂದ್ರಕಲಾ ತಿಳಿಸಿದ್ದಾರೆ.
ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸರ್ಕಾರಿ ಶಾಲೆಗಳ ನವೀಕರಣ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್, ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ವಿದ್ಯಾರ್ಥಿ ಹೋರಾಟದ ಬೇಡಿಕೆಗಳಿಗೆ ಸ್ಪಂದನೆ ದೊರೆತಿದೆ. ಆದರೆ, ಪ್ರತಿ ಜಿಲ್ಲೆಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ, ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಮತ್ತು ಇನ್ನಿತರ ವಿದ್ಯಾರ್ಥಿಗಳ ಬೇಡಿಕೆಗಳು ಈ ಬಜೆಟ್ ನಲ್ಲಿಯೂ ಈಡೇರಿಲ್ಲ. ಜೊತೆಗೆ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗುತ್ತಿದ್ದ ಲ್ಯಾಪ್ ಟಾಪ್ ಅಥವಾ ಟ್ಯಾಬ್ ಕುರಿತು ಅನುದಾನ ಬಿಡುಗಡೆಯಾಗಿಲ್ಲ. ಈ ಎಲ್ಲಾ ಬೇಡಿಕೆಗಳಿಗೂ ಇದೇ ಬಜೆಟ್ ನಲ್ಲಿ ಅನುದಾನ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ರಾಜ್ಯದ ಐದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು KIT ಯನ್ನಾಗಿ ಮಾರ್ಪಾಡು ಮಾಡಲು ಬಜೆಟ್ ನಲ್ಲಿ ಹೇಳಲಾಗಿದೆ. ಆದರೆ, ಇವುಗಳು ಸ್ವಾಯತ್ತ ಶಿಕ್ಷಣ ಸಂಸ್ಥೆಗಳಾಗಿ ಬದಲಾದಲ್ಲಿ, ಶುಲ್ಕ ಏರಿಕೆ ಇಂದಾಗಿ ಬಡ ವಿದ್ಯಾರ್ಥಿಗಳಿಗೆ ಈ ಸಂಸ್ಥೆಗಳ ಬಾಗಿಲುಗಳು ಮುಚ್ಚುತ್ತದೆ. ಈ ರೀತಿ ಜರುಗದಂತೆ ಸರ್ಕಾರ ಕ್ರಮ ವಹಿಸಬೇಕು. ಜೊತೆಗೆ, ಈ ಎಲ್ಲಾ ಘೋಷಣೆಗಳು ಕೇವಲ ಚುನಾವಣೆಯ ದೃಷ್ಟಿಯಿಂದ ಆಗಿರದೇ, ಮುಂದಿನ ಶೈಕ್ಷಣಿಕ ವರ್ಷದಿಂದಲೇ, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅನುಷ್ಠಾನಕ್ಕೆ ಬರುವಂತೆ ಅನುದಾನ ಬಿಡುಗಡೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.