Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಚಿವರ ಸಮ್ಮುಖದಲ್ಲೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ ರೈತರು

ಮಂಡ್ಯನಗರದಲ್ಲಿ ಟನ್ ಕಬ್ಬಿಗೆ 4500 ರೂ.ಬೆಲೆ ನಿಗದಿಗೆ ಆಗ್ರಹಿಸಿ ಕಳೆದ 38 ದಿನಗಳಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ, ಅಲ್ಲಿಗೆ ಭೇಟಿ ನೀಡಿ ಪ್ರತಿಭಟನಕಾರರಿಗೆ ಎಂದಿನಂತೆ ಭರವಸೆ ನೀಡಲು ಮುಂದಾದ, ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಎದುರಿನಲ್ಲೇ ರೈತರು ಬಿಜೆಪಿ ಸರ್ಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿದ ಘಟನೆ ಬುಧವಾರ ನಡೆಯಿತು.

ಸಚಿವರ ಮನವಿ ತಿರಸ್ಕರಿಸಿದ ರೈತರು 

ಧರಣಿ ಸ್ಥಳಕ್ಕೇ ಎರಡನೇ ಬಾರಿಗೆ ಭೇಟಿ ನೀಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಸಮಸ್ಯೆ ಬಗ್ಗೆ ಚರ್ಚಿಸಿದ್ದೇನೆ. ಮತ್ತೊಮ್ಮೆ ಧರಣಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುತ್ತೇನೆ. ನಿಮ್ಮ ಸಮಸ್ಯೆಗೆ ಸ್ಪಂದಿಸಲಿದ್ದಾರೆ ಎಂಬ ನಂಬಿಕೆ ಇದೆ. ಆದ್ದರಿಂದ ರೈತಸಂಘವು ಡಿ.19ರಂದು ಹಮ್ಮಿಕೊಂಡಿರುವ ಮಂಡ್ಯ ಬಂದ್ ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ  ರೈತರು ಅವರ ಮನವಿಯನ್ನು ತಿರಸ್ಕರಿದರು.

ಕಬ್ಬು, ಹಾಲು ಮತ್ತು ಭತ್ತಕ್ಕೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಕಳೆದ 38 ದಿನಗಳಿಂದ ರೈತಸಂಘದ ಕಾರ್ಯಕರ್ತರು ನಡೆಸುತ್ತಿದ್ದರೂ ಸರ್ಕಾರ ನಿರ್ಲಕ್ಷತೆ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಕೊನೆಗೆ ತಾಳ್ಮೆ ಕಳೆದು ಕೊಂಡು ”ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಮೊಳಗಿಸಿದರು. ಇದರಿಂದ ಸಿಡಿಮಿಡಿಗೊಂಡ ಸಚಿವರು ಅಲ್ಲಿಂದ ಕಾಲ್ಕಿತ್ತರು.

ಮುಖ್ಯಮಂತ್ರಿಗೆ ಘೇರಾವ್

ಇದೇ 16ರಂದು ಪಾಂಡವಪುರದಲ್ಲಿ ನಡೆಯಲಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಮಂಡ್ಯ ಮಾರ್ಗವಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳಲಿದ್ದು, ಅಂದು ಅಡ್ಡಹಾಕಿ ಘೇರಾವ್ ಮಾಡಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ. ಮಧುಚಂದನ್, ಪಿ.ಡಿ.ರಮೇಶ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!