ಸಾರ್ವಜನಿಕರು ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ಕರ್ನಾಟಕದ ಆರೋಗ್ಯ ಮೇಳದ ಪ್ರಯೋಜನ ಪಡೆಯಬೇಕೆಂದು ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಭಾಗಿತ್ವದಲ್ಲಿ ಆಯೋಜಿಸಿದ್ದ “ಆಯುಷ್ಮಾನ್ ಭವ ಆರೋಗ್ಯ ಮೇಳ” ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರಿಗೂ ಆರೋಗ್ಯ ಕಾರ್ಡ್ ತಲುಪಿಸಿ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಸೇವೆಗಳು ಸಾರ್ವಜನಿಕರು ಸಿಗುವಂತಾಗಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ತಿಂಗಳ ಮೊದಲ ವಾರ ಅ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಹಾಗೂ ತಪಾಸಣೆ, ಎರಡನೇ ವಾರ ಸಾಂಕ್ರಾಮಿಕ ರೋಗಗಳ ಬಗ್ಗೆ, ಮೂರನೇ ವಾರ ತಾಯಿ ಮಕ್ಕಳ ಆರೋಗ್ಯದ ಬಗ್ಗೆ, ನಾಲ್ಕನೇ ವಾರ ಪ್ಲೋರೋಸಿಸ್ ಇನ್ನಿತರ ಕಾಯಿಲೆಗಳ ಬಗ್ಗೆ ಜಾಗೃತಿ, ಅರಿವು ಮೂಡಿಸುವ ಕಾರ್ಯ ಹಾಗೂ ತಜ್ಞ ವೈದ್ಯರಿಂದ ತಪಾಸಣೆ ಶಿಬಿರ ನಡೆಯುತ್ತದೆ ಎಂದು ವಿವರಿಸಿದರು.
ಈಗಾಗಲೇ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನ ಕಾರ್ಡ್ ಉಪಯುಕ್ತತೆ ಬಗ್ಗೆ ಹಾಗೂ ಆರೋಗ್ಯ ತಪಾಸಣಾ ಮೇಳದ ಬಗ್ಗೆ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಮನೆ ಬಾಗಿಲಿಗೆ ತೆರಳಿ ಮಾಹಿತಿ ನೀಡಿ ಕಾರ್ಡ್ ಮಾಡಿಸಲು ಪ್ರೇರೇಪಣೆ ಮಾಡುತ್ತಿದ್ದಾರೆ, ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಹಾಗಾಗಿ ಸಾರ್ವಜನಿಕರು ಮೇಳದ ಪ್ರಯೋಜನ ಪಡೆಯಬೇಕೆಂದರು.
ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್ ಮಾತನಾಡಿ, ಜನಗಳಿಗೆ ಸ್ಪೆಸಿಯಾಲಿಟಿ ಸೇವೆಗಳು ಮನೆ ಬಾಗಿಲಿಗೆ ಒದಗಿಸುವುದು ಶಿಬಿರದ ಮುಖ್ಯ ಉದ್ದೇಶವಾಗಿದ್ದು, ಈ ವಿಶೇಷ ಶಿಬಿರದಲ್ಲಿ ಮಕ್ಕಳ ತಜ್ಞರು, ಮೂಳೆ ತಜ್ಞರು, ನೇತ್ರ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು, ಮಾನಸಿಕ ಚಿಕಿತ್ಸೆ ತಜ್ಞರು ಹಾಗೂ ಪಿಜಿಷಿಯನ್ ನಂತಹ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನೀಡಿ ಚಿಕಿತ್ಸೆ ನೀಡಲಾಗುತ್ತದೆ ಸಾರ್ವಜನಿಕರು ಶಿಬಿರದ ಲಾಭ ಪಡೆಯಬೇಕೆಂದರು.
ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷ ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್ ಕೆ ವೆಂಕಟೇಶ್, ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ, ಸ್ತ್ರೀರೋಗ ತಜ್ಞ ಡಾ.ಸವಿತ, ದಂತ ವೈದ್ಯಾಧಿಕಾರಿ ಡಾ.ಅನುಪಮಾ, ಜಿಲ್ಲಾ ಎ ಬಿ ಎ ಆರ್ ಕೆ ಸಲಹೆಗಾರ ಡಾ.ಚರಣಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಶ್ವೇತ ಲತಾ, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಜಿಲ್ಲಾ ಸಲಹೆಗಾರ ತಿಮ್ಮರಾಜು ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.