ಪ್ರಧಾನಿ ಮೋದಿ ಅವರು ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು, ಆ ಉದ್ಯೋಗಗಳು ಎಲ್ಲಿವೆ? ಅವರು ಹೇಳಿದಂತೆ ಇದುವರೆಗೂ 18 ಕೋಟಿ ಉದ್ಯೋಗ ನೀಡಬೇಕಿತ್ತು. ಈ ಬಗ್ಗೆ ಯಾರಾದರೂ ಕೇಳಿದ್ದೀರಾ? ಬೆಂಬಲ ಬೆಲೆ ಹೆಚ್ಚಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರು ಅದನ್ನಾದರೂ ಮಾಡಿದ್ದಾರಾ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಿತ್ರದುರ್ಗದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಬೃಹತ್ ದಲಿತರ ಐಕ್ಯತಾ ಸಮಾವೇಶದಲ್ಲಿ ಸೇರಿದ್ದ ಬೃಹತ್ ಜನಸ್ತೋಮವನ್ನು ಉದ್ಧೇಶಿಸಿ ಅವರು ಮಾತನಾಡಿದರು.
30 ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರಿಗೆ ಶೇ.50ರಷ್ಟು ಮೀಸಲಾತಿ ಇತ್ತು. ಸಾರ್ವಜನಿಕ ವಲಯದ ಉದ್ದಿಮೆಗಳ ಉದ್ಯೋಗಗಳು ಈ ವರ್ಗದವರಿಗೆ ಸಿಗುತ್ತಿತ್ತು. ಇದನ್ನು ತಪ್ಪಿಸಲು ಖಾಸಗಿಯವರಿಗೆ ಮಾರುತ್ತಿದ್ದಾರೆ. ಆ ಮೂಲಕ ಬಡವರು, ಪರಿಶಿಷ್ಟರ ಕೈಗೆ ಹಣ ಸಿಗಬಾರದು ಎಂಬ ಷಡ್ಯಂತ್ರ ರೂಪಿಸಿದ್ದಾರೆ.
ರಾಹುಲ್ ಗಾಂಧಿ ಅವರ ಜತೆ ನಾನು ಭಾರತ ಜೋಡೋ ಯಾತ್ರೆಯಲ್ಲಿ ಅನೇಕ ಬಾರಿ ಭಾಗವಹಿಸಿದ್ದೇನೆ. ದೇಶದಾದ್ಯಂತ ಲಕ್ಷಾಂತರ ಜನರು ಯಾತ್ರೆಗೆ ಬೆಂಬಲ ನೀಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಬೆಲೆ ಏರಿಕೆ, ನಿರುದ್ಯೋಗ, ಸಮಾಜದಲ್ಲಿನ ಅಶಾಂತಿಯ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಸಂವಿಧಾನ, ಪ್ರಜಾಪ್ರಭುತ್ವ ಉಳಿದರೆ ಮಾತ್ರ ನಿಮಗೆ ನಿಮ್ಮ ಹಕ್ಕಿನ ಮೀಸಲಾತಿ, ಬಡ್ತಿ, ಉದ್ಯೋಗ, ಎಲ್ಲವೂ ಸಿಗಲಿದೆ. ಹೀಗಾಗಿ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಲು ಇಂದು ನೀವಿಲ್ಲಿ ಲಕ್ಷಾಂತರ ಮಂದಿ ಸೇರಿದ್ದೀರಿ.