ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಅವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬಾದಾಮಿಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕುತ್ತಿದ್ದಾರೆ. ಅವರು ಕೋಲಾರದಿಂದ ಸ್ಪರ್ಧಿಸಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಈ ನಡುವೆ, ಸಿದ್ದರಾಮಯ್ಯ ಅವರು ವರುಣಾಗೆ ಬಂದರೆ, ಅವರಿಗಾಗಿ ಕ್ಷೇತ್ರ ಬಿಟ್ಟುಕೊಡುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಯತೀಂದ್ರ, “ಮೈಸೂರಿನ ವರುಣಾ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಅದೃಷ್ಟದ ಕ್ಷೇತ್ರ. ಅಲ್ಲಿಂದ ಗೆದ್ದು ವಿಪಕ್ಷದ ನಾಯಕರಾಗಿದ್ದರು. ಮುಖ್ಯಮಂತ್ರಿಯಾಗಿದ್ದರು. ವರುಣಾ ಕ್ಷೇತ್ರದಲ್ಲಿ ನಿಂತಾಗೆಲ್ಲ ಅವರಿಗೆ ಅಧಿಕಾರ ಸಿಕ್ಕಿದೆ. ಈಗಲೂ ಅವರು ಮುಖ್ಯಮಂತ್ರಿಯಾಗುವ ಅವಕಾಶಗಳಿವೆ. ಹೀಗಾಗಿ, ಅವರು ವರುಣಾದಿಂದಲೇ ಸ್ಪರ್ಧಿಸಬೇಕು” ಎಂದು ಹೇಳಿದ್ದಾರೆ.
“ಸಿದ್ದರಾಮಯ್ಯ ಇದೇ ತಮ್ಮ ಕೊನೆಯ ಚುನಾವಣೆಯೆಂದು ಹೇಳಿದ್ದಾರೆ. ಅವರ ಕಡೆಯ ಚುನಾವಣೆಯಲ್ಲಿ ವರುಣಾದಿಂದಲೇ ಸ್ಪರ್ಧಿಸಬೇಕು ಎಂಬುದು ನನ್ನ ಬಯಕೆ. ಅವರು ಇಲ್ಲಿಂದಲೇ ಸ್ಪರ್ಧಿಸಬೇಕೆಂದೂ ನಾನು ಒತ್ತಾಯಿಸುತ್ತಿದ್ದೇನೆ” ಎಂದಿದ್ದಾರೆ.
“ಸಿದ್ದರಾಮಯ್ಯ ವರುಣಾಗೆ ಬಂದರೆ, ನಾನು ಸ್ಪರ್ಧಿಸುವುದಿಲ್ಲ. ಅವರಿಗೆ ಕ್ಷೇತ್ರ ಬಿಟ್ಟುಕೊಡುತ್ತೇನೆ. ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದೂ ಯತೀಂದ್ರ ಹೇಳಿದ್ದಾರೆ.