ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಅಭಿಯಾನ ಇಂದು ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಗೊಂಡೆನಹಳ್ಳಿ ಗ್ರಾಮದಲ್ಲಿ ನಡೆಯುತ್ತಿದೆ. ಇಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಗ್ರಾಮವಾಸ್ತವ್ಯ ಮಾಡಿದ್ದು,ಜನರ ಅಹವಾಲು ಆಲಿಸುತ್ತಿದ್ದಾರೆ.
ಗೊಂಡೆನಹಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಕಳಸ ಹೊತ್ತ ಮಹಿಳೆಯರು ಅದ್ದೂರಿ ಸ್ವಾಗತ ಮಾಡಿದರು. ನಂತರ ಎತ್ತಿನ ಗಾಡಿಯಿಂದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಹೋಗಲಾಯಿತು.ಅಲ್ಲಿ ಅವರು ದೇವರ ದರ್ಶನ ಪಡೆದರು.
ಗೊಂಡೆನಹಳ್ಳಿ ಗ್ರಾಮದ ಅರಳಿಕಟ್ಟೆಯ ಬಳಿ ಆಯೋಜಿಸಲಾಗಿದ್ದ ಕುಂದು ಕೊರತೆ ಚರ್ಚೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಭಾಗವಹಿಸಿ ಗ್ರಾಮಸ್ಥರು ಮುಕ್ತವಾಗಿ ತಮ್ಮ ಸಮಸ್ಯೆಗಳನ್ನು ಜಿಲ್ಲಾಡಳಿತದ ಮುಂದೆ ಚರ್ಚಿಸಬಹುದು ಎಂದರು.
ಗ್ರಾಮದ ಜನತೆ ರಸ್ತೆ, ಬೀದಿದೀಪ, ನೀರಿನ ಸಮಸ್ಯೆ ಹಾಗೂ ಇನ್ನಿತರ ಕುಂದು ಕೊರತೆ ಕುರಿತು ಜಿಲ್ಲಾಧಿಕಾರಿಗಳ ಮುಂದೆ ಹೇಳಿಕೊಂಡರು. ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಗ್ರಾಮದಲ್ಲಿರುವ ಕುಂದು ಕೊರತೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ನಂದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.