ರಾಜ್ಯ ಸರ್ಕಾರ ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ಇಂದು ಆದೇಶ ಹೊರಡಿಸಿದ್ದು, ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈಗಾಗಲೇ ದಿನದಿತ್ಯ ವಸ್ತುಗಳ ಬೆಲೆ ಏರಿಕೆ ಶಾಕ್ ನಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.
ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ, ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು.
ಪರಿಷ್ಕೃತ ದರವನ್ನು ರೈತರಿಗೆ ನೀಡುವುದಾಗಿ ಸರ್ಕಾರ ಹೇಳಿದೆ. ಆದರೆ ಸರ್ಕಾರ ಈ ಹಣವನ್ನು ನೀಡಲು ನೇರವಾಗಿ ಗ್ರಾಹಕರ ಜೇಬಿಗೆ ಕೈ ಹಾಕಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿದ್ದವು. ಈ ಹಿನ್ನಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಇತ್ತೀಚೆಗಷ್ಟೇ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದರು.
ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದಿದ್ದರು.
ಅದರಂತೆ ಇಂದು ಸರ್ಕಾರ ಹಾಲು ಮತ್ತು ಮೊಸರಿನ ದರವನ್ನು ಲೀ.3 ರೂ ಹೆಚ್ಚಳ ಮಾಡಿದೆ.