ಮಂಡ್ಯ ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪನಾಗ್ ಅವರು, ಮಹಾತ್ಮ ಗಾಂಧಿ ರಾಷ್ತ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.
75ನೇ ಸ್ವಾತಂತ್ರ್ಯ ಅಮೃತ ಸರೋವರ ಕಾಮಗಾರಿ, ಶಾಲಾ ಆಟದ ಮೈದಾನ, ಶೌಚಾಲಯ, ಅಂಗನವಾಡಿ ಕೇಂದ್ರ, ಸ್ವಸಹಾಯ ಗುಂಪಿನ ನರ್ಸರಿ ಪ್ರಾರಂಭಿಸಿರುವ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಮಳವಳ್ಳಿ ತಾಲ್ಲೂಕಿನ ಹುಸ್ಕೂರು ಮತ್ತು ಯತ್ತಂಬಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಲುವೆ ಕಾಮಗಾರಿ ಮತ್ತು ಮದ್ದೂರು ತಾಲ್ಲೂಕಿನ ಹನೂರು, ಸಿ.ಎ.ಕೆರೆ ಮತ್ತು ಹೆಮ್ಮನಹಳ್ಳಿ ಗ್ರಾಮ ಪಂಚಾಯತಿಯ ಕಾಲುವೆ ಕಾಮಗಾರಿಗಳಿಗೆ ಭೇಟಿ ನೀಡಿ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ನಂತರ ಮಾತನಾಡಿದ ಅವರು, ನೀರಿನ ಮೂಲಗಳನ್ನು ಉಳಿಸಿಕೊಂಡು ಅಭಿವೃದ್ಧಿ ಮಾಡಿ, ಸಂರಕ್ಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ಹಾಗಾಗಿ ನರೇಗಾ ಯೋಜನೆಯಲ್ಲಿ ಗ್ರಾಮ ಪಂಚಾಯಿತಿ ಸಂಪನ್ಮೂಲಗಳನ್ನು ಬಳಸಿ ನೀರಿನ ಸಂಗ್ರಹಣೆ ಹಾಗೂ ಸಂರಕ್ಷಣೆ ಮಾಡಬೇಕಾದ್ದು ನಮ್ಮ ಜವಾಬ್ದಾರಿ ಎಂದರು.
ಕಾಲುವೆ, ನಾಲಾಗಳನ್ನು ಅಭಿವೃದ್ಧಿಪಡಿಸಬೇಕು. ಒತ್ತುವರಿಯಾಗಿರುವ ಕಾಲುವೆಗಳನ್ನು ತೆರವುಗೊಳಿಸಿ, ಜಲ ಸಂರಕ್ಷಣೆಗೆ ಕ್ರಮವಹಿಸಿ ಹಾಗೂ ಕಾಲುವೆ ಅಭಿವೃದ್ಧಿ ಪಡಿಸಿ ಎಂದು ಸಲಹೆ ನೀಡಿದ ಅವರು, ಕಾಲುವೆ ನೀರಿನಿಂದ ಸುತ್ತಮುತ್ತಲಿನ ರೈತರ ಭೂಮಿ ಫಲವತ್ತತೆಯಿಂದ ಕೂಡಿರುತ್ತದೆ ಹಾಗೂ ಅಂತರ್ಜಲ ಮಟ್ಟವು ಹೆಚ್ಚುತ್ತದೆ ಎಂದರು.
ಇದೇ ವೇಳೆ ಯತ್ತಂಬಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಅಂಗನವಾಡಿ ಕೇಂದ್ರವನ್ನು ವೀಕ್ಷಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್. ಹುಲ್ಮನಿ, ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಕಾರ್ಯ ನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ, ಸಹಾಯಕ ನಿರ್ದೇಶಕ ದೀಪು, ಎಲ್ಲಾ ತಾಲ್ಲೂಕಿನ ನರೇಗಾ ತಾಂತ್ರಿಕ ಸಂಯೋಜಕರು ಹಾಗೂ ಸಹಾಯಕರುಗಳು ಉಪಸ್ಥಿತರಿದ್ದರು.