ಮಂಡ್ಯ ಜಿಲ್ಲೆಯಲ್ಲಿ ನೀರಿನ ಬಳಕೆ ಹಾಗೂ ರಸಗೊಬ್ಬರಗಳ ಬಳಕೆಯಿಂದ ಮಂಡ್ಯದ ಮಣ್ಣಿನ ಸತ್ವ ಕಳೆದು ಹೋಗಿದೆ. ಹಾಗಾಗಿ ಇದರ ಪುನರುಜ್ಜೀವನಕ್ಕೆ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ರಾಜ್ಯ ಸರ್ಕಾರ ಸ್ಥಾಪಿಸುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ನರೇಂದ್ರಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಮತ್ತು ಅಂಬೇಡ್ಕರ್ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ, ಕೇವಲ ಚುನಾವಣಾ ಪ್ರಚಾರಕ್ಕಾಗಿ ನೈಜ್ಯ ವಿಚಾರವನ್ನು ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ, ಅಂಬೇಡ್ಕರ್ ಅವರನ್ನು ಸೋಲಿಸಿದರು ಅಂದಿನ ಪುರೋಹಿತಶಾಹಿಗಳೇ ಹೊರತು ಕಾಂಗ್ರೆಸಿಗರಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್ ಸಿ ಪಿ, ಟಿಎಸ್ಪಿ ಅನುದಾನ ಬಳಕೆಯ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನೀಡಿರುವ ಹೇಳಿಕೆ ಖಂಡಿನೀಯ. ವಿರೋಧ ಪಕ್ಷಗಳು ಸುಳ್ಳು ಹೇಳಿ ಅದನ್ನು ಸತ್ಯ ಮಾಡಲು ಹೊರಟಿದ್ದಾರೆ, ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಾಲೆಗಳ ಆಧುನಿಕರಣ ಕಾಮಗಾರಿಯನ್ನು ನಾವು ಮಂಜೂರು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಅವರ ಕಾಲದಲ್ಲಿ ಇದು ಆಗಿಲ್ಲ. ಈ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರಿಗೆ ಮಂಡ್ಯದ ಬಗ್ಗೆ ಪರಿಜ್ಞಾನ ಇದ್ದಂತೆ ಕಾಣುತ್ತಿಲ್ಲ ಎಂದರು.
ಮೈಷುಗರ್ ಕಾರ್ಖಾನೆಯಲ್ಲಿ ಈಗಾಗಲೇ ಹಣ ದುರುಪಯೋಗ ಮಾಡಿಕೊಂಡಿರುವವರ ವಿರುದ್ಧ ತನಿಖೆ ನಡೆಯುತ್ತಿದೆ. ಈ ವಿಚಾರವನ್ನು ಅವರು ಮುಂದೆ ತರುವುದಿಲ್ಲ. ಆದರೆ ರೈತರ ಬದುಕು ಕೃಷಿಯ ಮೇಲೆ ನಿಂತಿದ್ದು ಇದರ ಜವಾಬ್ದಾರಿ ಹೊರಬೇಕಿದ್ದವರು ಸುಳ್ಳು ಹೇಳುತ್ತಾ ಯಾವ ಪುರುಷಾರ್ಥಕ್ಕೆ ಚುನಾವಣೆಗೆ ನಿಂತಿದ್ದಾರೆ ಎಂದು ಪರೋಕ್ಷವಾಗಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಟೀಕಿಸಿದರು.