ಮಹಿಳೆಯರು ಹಾಗೂ ಹದಿಹರೆಯದವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಮುಂದಾಗುವ ಅನಾರೋಗ್ಯವನ್ನು ತಡೆಯಬಹುದಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಹೇಳಿದರು.
ಶ್ರೀರಂಗಪಟ್ಟಣದ ರಂಗನಾಯಕಿ ಸ್ತ್ರೀ ಸಮಾಜದ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ನೆಹರು ಯುವ ಕೇಂದ್ರದ ಸದಸ್ಯರುಗಳಿಗಾಗಿ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆ” ಗಳ ಕುರಿತು ಏರ್ಪಡಿಸಿದ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಯಶಸ್ವಿಯಾಗಿ ಪರಿಣಾಮಕಾರಿಯಾಗಲು ನೆಹರು ಯುವ ಕೇಂದ್ರದ ಮೂಲಕ ಜನ ಸಮುದಾಯವನ್ನು ಪ್ರೇರೇಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ, ಪ್ರಮುಖ ಆರೋಗ್ಯ ಕಾರ್ಯಕ್ರಮಗಳಾದ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ, ಆರೋಗ್ಯ ಕರ್ನಾಟಕ, ಹೃದಯ ವೈಶಾಲ್ಯತೆ, ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ, ಕುಷ್ಟರೋಗ ಹಾಗೂ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಇತರೆ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಿ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸೇವೆಗಳು ಸಿಗುತ್ತವೆ ಕಾರ್ಯಕ್ರಮಗಳ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಗಳಾ ,ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ, ಹದಿಹರೆಯದವರ ಆರೋಗ್ಯ ಸಮಸ್ಯೆಗಳು, ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕ್ಷಯ ಮುಕ್ತ ಕರ್ನಾಟಕ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸಭೆಯಲ್ಲಿ ರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ, ನಗರ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಎನ್ ಸರಸ್ವತಿ, ನೆಹರು ಯುವ ಕೇಂದ್ರದ ಪ್ರಮುಖರಾದ ಶೀಲಾ ನಂಜುಂಡಯ್ಯ, ಕೌಶಲ್ಯ, ನಳಿನಿ ಸತ್ಯನಾರಾಯಣ ಹಾಗೂ ಸದಸ್ಯರು ಹಾಜರಿದ್ದರು.