ಮಂಡ್ಯ ಜಿಲ್ಲೆಯ ತುಂಬಕೆರೆ ಮೊರಾರ್ಜಿ ದೇಸಾಯಿ ಶಾಲೆಯ ನವನೀತ್ ಎಂಬ ವಿದ್ಯಾರ್ಥಿ 625 ಅಂಕಗಳಿಗೆ 623 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಹಾಗೂ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿಯನ್ನು ಮಂಡ್ಯ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಇತರೆ ಅಧಿಕಾರಿಗಳು ಗುರುವಾರ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಎಸ್ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, 32 ಶಾಲೆಗಳಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದುಕೊಂಡಿವೆ, ಸರ್ಕಾರಿ ಶಾಲೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಇತರೆ ವಿದ್ಯಾರ್ಥಿಗಳಿಗೆ ಮಾದರಿ ಎಂದರು.
ನವನೀತ್ ಅವರ ತಂದೆ ತಾಯಿ ಕೃಷಿಕರಾಗಿದ್ದು, ರೈತರ ಮಕ್ಕಳು ಸಹ ಉನ್ನತ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದೇನೆ ಎಂದು ತಪ್ಪು ಗ್ರಹಿಕೆಯಿಂದ ಮದ್ದೂರು ತಾಲ್ಲೂಕಿನ ವಿದ್ಯಾರ್ಥಿನಿ ಹಾಗೂ ನಾಗಮಂಗಲ ತಾಲ್ಲೂಕಿನ ವಿದ್ಯಾರ್ಥಿ ಅನುತ್ತೀರ್ಣನಾಗಿ ವಿದ್ಯಾರ್ಥಿ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ದುಃಖ ಕರ ಸಂಗತಿಯಾಗಿದೆ. ವಿದ್ಯಾರ್ಥಿಗಳು ಇಂತಹ ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಪರೀಕ್ಷೆ ಬರೆದು ಉತ್ತೀರ್ಣರಾಗಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಮಂಡ್ಯ ಜಿಲ್ಲೆ 19 ನೇ ಸ್ಥಾನ ಪಡೆದುಕೊಂಡಿದ್ದು ಶೇ 74.54 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶೇ 71.85, ಅನುದಾನಿತ ಶಾಲೆ – 63.27, ಖಾಸಗಿ-ಶೇ 87.46 ಫಲಿತಾಂಶ ಪಡೆದುಕೊಳ್ಳಲಾಗಿದೆ ಎಂದರು.
ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅನುತೀರ್ಣರಾದ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಮತ್ತೆ ಪರೀಕ್ಷೆ ಬಗ್ಗೆ ಬರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಜೂನ್ 7 ರಿಂದ ಎರಡನೇ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.