ವಿರೋಧ ಪಕ್ಷಗಳ ಒಕ್ಕೂಟ INDIAದ ಮುಂದಿನ ಸಭೆ ಮುಂಬೈನಲ್ಲಿ ನಡೆಯಲಿದ್ದು, ಈ ವೇಳೆ ಇನ್ನೂ ಕೆಲವು ರಾಜಕೀಯ ಪಕ್ಷಗಳು ಒಕ್ಕೂಟವನ್ನು ಸೇರುವ ಸಾಧ್ಯತೆಯಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಹೇಳಿದ್ದಾರೆ.
ಬಿಜೆಪಿಯನ್ನು ವಿರೋಧಿಸುವ ವಿವಿಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು, ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಬಹಿರಂಗಪಡಿ ಸುವುದಿಲ್ಲ ಆದರೆ ಸೀಟು ಹಂಚಿಕೆಯಂತಹ ಚುನಾವಣಾ ಸಂಬಂಧಿತ ವಿಧಾನಗಳನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್ ಅವರು, ”ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟದ ಕಾರ್ಯತಂತ್ರಗಳ ಬಗ್ಗೆ ನಾವು ಚರ್ಚಿಸುತ್ತೇವೆ. ಸೀಟು ಹಂಚಿಕೆಯಂತಹ ವಿಷಯಗಳನ್ನು ಚರ್ಚಿಸಲಾಗುವುದು ಮತ್ತು ಇತರ ಕಾರ್ಯಸೂಚಿಗಳನ್ನು ಅಂತಿಮಗೊಳಿಸಲಾಗುವುದು. ಇನ್ನೂ ಕೆಲವು ರಾಜಕೀಯ ಪಕ್ಷಗಳು ನಮ್ಮ ಒಕ್ಕೂಟವನ್ನು ಸೇರುತ್ತವೆ” ಎಂದು ಅವರು ಹೇಳಿದ್ದಾರೆ.
”2024ರ ಲೋಕಸಭೆ ಚುನಾವಣೆಗೂ ಮುನ್ನ ಇನ್ನೂ ಹೆಚ್ಚಿನ ಪಕ್ಷಗಳನ್ನು ಒಗ್ಗೂಡಿಸಲು ನಾನು ಇಚ್ಛಿಸುತ್ತೇನೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನಗೆ ಯಾವುದೇ ವೈಯಕ್ತಿಕ ಆಸೆಗಳು ಇಲ್ಲ” ಎಂದು ಅವರು ಹೇಳಿದ್ದಾರೆ.
ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಎದುರಿಸಲು ರಚಿಸಲಾದ 26-ಪಕ್ಷಗಳ ಒಕ್ಕೂಟವು ಈಗಾಗಲೇ ಒಂದು ತಿಂಗಳೊಳಗೆ ಎರಡು ಬಾರಿ ಸಭೆ ನಡೆಸಿದೆ. ಮೊದಲು ಸಭೆ ಜೂನ್ 23 ರಂದು ಪಾಟ್ನಾದಲ್ಲಿ ಮತ್ತು ನಂತರ ಜುಲೈ 17-18ರಂದು ಬೆಂಗಳೂರಿನಲ್ಲಿ ನಡೆಸಲಾಯಿತು. ಮೂರನೇ ಸಭೆಯನ್ನು ಮುಂಬೈನಲ್ಲಿ ನಡೆಸಲು ಸಿದ್ಧವಾಗಿದೆ.